ಮಥುರಾ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಗೋ ರಕ್ಷಣಾ ಕಾರ್ಯಕರ್ತರೊಬ್ಬರು ಗೋ ಕಳ್ಳಸಾಗಣೆದಾರರನ್ನು ಬೆನ್ನಟ್ಟುವ ಪ್ರಯತ್ನದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಈ ಭಾಗದಲ್ಲಿ ‘ಫರ್ಸಾ ವಾಲೆ ಬಾಬಾ’ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ್ ಎಂಬವರು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಬೆನ್ನಟ್ಟುವ ವೇಳೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಡುರಾತ್ರಿ ನಡೆದ ಭೀಕರ ಚೇಸ್
ಪೊಲೀಸ್ ಮೂಲಗಳ ಪ್ರಕಾರ, ಕೋಸಿ ಕಲಾನ್ ಪೊಲೀಸ್ ಚೌಕಿ ವ್ಯಾಪ್ತಿಯ ನವಿಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ತಡರಾತ್ರಿ ಲಾರಿಯೊಂದರಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದ ಚಂದ್ರಶೇಖರ್ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಲಾರಿಯನ್ನು ಹಿಂಬಾಲಿಸಿದ್ದರು. ಲಾರಿಯನ್ನು ತಡೆಯಲು ಯತ್ನಿಸಿದಾಗ, ಆರೋಪಿಗಳು ಉದ್ದೇಶಪೂರ್ವಕವಾಗಿ ವಾಹನವನ್ನು ಅವರಿಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಚಂದ್ರಶೇಖರ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉದ್ವಿಗ್ನಗೊಂಡ ಬ್ರಜ್ ಪ್ರದೇಶ
ಚಂದ್ರಶೇಖರ್ ಅವರು ಬ್ರಜ್ ಪ್ರಾಂತ್ಯದಲ್ಲಿ ಗೋ ರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಿಸಿದ್ದಾರೆ. ಹೆದ್ದಾರಿ ತಡೆದು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಗೋವಿನ ರಕ್ಷಣೆಗಾಗಿ ಸದಾ ಕೈಯಲ್ಲಿ ‘ಫರ್ಸಾ’ (ಒಂದು ರೀತಿಯ ಪರಶು) ಹಿಡಿದುಕೊಂಡಿರುತ್ತಿದ್ದ ಕಾರಣ ಅವರಿಗೆ ‘ಫರ್ಸಾ ವಾಲೆ ಬಾಬಾ’ ಎಂಬ ಹೆಸರು ಬಂದಿತ್ತು.
ಆರೋಪಿಗಳಿಗಾಗಿ ಬಲೆ ಬೀಸಿದ ಪೊಲೀಸರು
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಲಾರಿಯಲ್ಲಿದ್ದ ಇತರ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಕಳ್ಳಸಾಗಣೆಗೆ ಬಳಸಲಾದ ವಾಹನವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದ್ಯ ಪ್ರದೇಶದಲ್ಲಿ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ : ಜೀವಂತವಾಗಿದ್ದ ವ್ಯಕ್ತಿಯನ್ನು ಸ್ಮಶಾನದಲ್ಲೇ ಬಿಟ್ಟು ಹೋದ ಕುಟುಂಬ



















