ನವದೆಹಲಿ : ಪೇಪರ್ ಲೀಕ್ ಪ್ರಕರಣಗಳ ವಿಚಾರಣೆಗೆ ಫಾಸ್ಟ್ಟ್ರ್ಯಾಕ್ ಕೋರ್ಟ್ಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವುದಕ್ಕೆ ‘ದಿ ಕಾಕ್ರೋಚ್ ಜನತಾ ಪಾರ್ಟಿ’ (CJP) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿ ಘೋಷಣೆ ಮೂಲ ಸಮಸ್ಯೆಯನ್ನು ಪರಿಹರಿಸುವುದಿಲ್ಲ, ಇದು ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಮಾತ್ರ ಎಂದು CJP ಆರೋಪಿಸಿದೆ.
NEET ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು ಎಂಬ ತನ್ನ ಬೇಡಿಕೆಯನ್ನು ಸಂಘಟನೆ ಮತ್ತೊಮ್ಮೆ ಒತ್ತಿ ಹೇಳಿದೆ. ಹೊಣೆಗಾರಿಕೆ ಮೊದಲು ಶಿಕ್ಷಣ ಸಚಿವರಿಂದಲೇ ಆರಂಭವಾಗಬೇಕು ಎಂದು CJP ಆಗ್ರಹಿಸಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ನೀಡಲು ಕೇಂದ್ರ ಸರ್ಕಾರ ಫಾಸ್ಟ್ಟ್ರ್ಯಾಕ್ ಕೋರ್ಟ್ಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪ್ರಕಟಿಸಿದ್ದರು. ಪ್ರಧಾನಿ ಮೋದಿ ಈ ಘೋಷಣೆ ಮಾಡಿದ ಬೆನ್ನಲ್ಲೇ CJP ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, “ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು” ಎಂದು ಬರೆದುಕೊಂಡಿದೆ. CJP ನಾಯಕ ಅಭಿಜೀತ್ ದಿಪ್ಕೆ ಅವರು ಪ್ರಧಾನಿ ಮೋದಿಯವರ ಸಂದೇಶವನ್ನು ಮರುಹಂಚಿಕೊಂಡು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ “ಹಾಯ್, ನಾನು ಏನೂ ಅಲ್ಲ” ಎಂಬ ಬರಹವಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯಲು ಸರ್ಕಾರ ನಿರಾಕರಿಸುತ್ತಿದೆ ಎಂದು ಆರೋಪಿಸಿ ಪ್ರಧಾನಿ ಮೋದಿ ಮತ್ತು ಶಿಕ್ಷಣ ಸಚಿವರ ವಿರುದ್ಧ ಸಂಘಟನೆ ವ್ಯಂಗ್ಯವಾಡಿದೆ.
ಫಾಸ್ಟ್ಟ್ರ್ಯಾಕ್ ಕೋರ್ಟ್ಗಳು ಪ್ರಶ್ನೆಪತ್ರಿಕೆ ಸೋರಿಕೆ ಸಮಸ್ಯೆಗೆ ನಿಜವಾದ ಪರಿಹಾರವಲ್ಲ ಎಂದು CJP ವಕ್ತಾರ ಆಶುತೋಷ್ ರಾಂಕಾ ಹೇಳಿದ್ದಾರೆ. “ಫಾಸ್ಟ್ಟ್ರ್ಯಾಕ್ ಕೋರ್ಟ್ಗಳ ಘೋಷಣೆ ನಿಜವಾದ ಪರಿಹಾರವಲ್ಲ. ಇದು ಕೇವಲ ಜನರ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ. ದೇಶದ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕ್ರೂರವಾಗಿ ಆಟವಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಭಾರತದಲ್ಲಿ ಫಾಸ್ಟ್ಟ್ರ್ಯಾಕ್ ಕೋರ್ಟ್ಗಳ ಕೊರತೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಂಪೂರ್ಣವಾಗಿ ಅಸಮರ್ಥರಾಗಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಅವರು ಟೀಕಿಸಿದ್ದಾರೆ.
ಇನ್ನು, ಶಿಕ್ಷಣ ಸಚಿವರು ಸುರಕ್ಷಿತ ಮತ್ತು ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶವಿಲ್ಲದ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವಲ್ಲಿ ವಿಫಲರಾಗಿದ್ದಾರೆ ಎಂದು CJP ಆರೋಪಿಸಿದೆ. ದೇಶದ ಯುವಕರು ಈಗ ಎಲ್ಲಕ್ಕಿಂತ ಹೆಚ್ಚಾಗಿ ಹೊಣೆಗಾರಿಕೆಯನ್ನು ಕೇಳುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಹೊಣೆಗಾರಿಕೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರಿಂದಲೇ ಆರಂಭವಾಗಬೇಕು ಎಂದು ಆಶುತೋಷ್ ರಾಂಕಾ ಹೇಳಿದ್ದಾರೆ. ಸರ್ಕಾರ ಘೋಷಿಸಿರುವ ಪರಿಹಾರವು ಗಂಭೀರವಾಗಿ ಮುರಿದಿರುವ ಎಲುಬಿನ ಮೇಲೆ ಬ್ಯಾಂಡೇಜ್ ಹಾಕಿದಂತಿದೆ. ಸಮಸ್ಯೆ ಇನ್ನಷ್ಟು ಆಳದಲ್ಲಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿರುವ ಮೂಲಭೂತ ವೈಫಲ್ಯಗಳನ್ನು ಸರಿಪಡಿಸದಿದ್ದರೆ ಪ್ರಶ್ನೆಪತ್ರಿಕೆ ಸೋರಿಕೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.
ಮುಂದುವರೆದ CJP ಪ್ರತಿಭಟನೆ
NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿರುದ್ಧ ದೆಹಲಿಯಲ್ಲಿ CJP ನೇತೃತ್ವದಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಕೇಂದ್ರ ಸರ್ಕಾರ ಹೊಣೆಗಾರಿಕೆ ವಹಿಸಬೇಕು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ತೀವ್ರಗೊಂಡಿದ್ದು, ಜಂತರ್ ಮಂತರ್ ಸೇರಿದಂತೆ ದೆಹಲಿಯ ಹಲವು ಪ್ರದೇಶಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಗೂ ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಪ್ರತಿಭಟನೆ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪವೂ ನಡೆಯುತ್ತಿದೆ. ದೆಹಲಿಯ ಹಲವು ಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಸರ್ಕಾರದ ಕ್ರಮವನ್ನು ಬಿಜೆಪಿ ಸಮರ್ಥಿಸಿಕೊಂಡಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ಹಿರಿಯ ನಾಯಕರು ಪ್ರತಿಪಕ್ಷಗಳು ಪ್ರತಿಭಟನೆಯನ್ನು ರಾಜಕೀಯಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ. ಆದರೆ CJP ತನ್ನ ಪ್ರಮುಖ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಮತ್ತು ಪರೀಕ್ಷಾ ಅಕ್ರಮಗಳಿಗೆ ಹೊಣೆಗಾರರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯನ್ನು CJP ಮುಂದುವರಿಸಿದೆ.
ಇದನ್ನೂ ಓದಿ : ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ


















