ಉಡುಪಿ : ಉಡುಪಿಯಲ್ಲಿ “ಸಮಾಧಾನ ಮಹೋತ್ಸವ” ನಡೆಸಲು ಅವಕಾಶ ನೀಡಿದರೆ ತೀವ್ರ ಹೋರಾಟ ನಡೆಸುವುದಾಗಿ ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ.
ಮಾ.20-22ರವೆಗೆ ಉಡುಪಿ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಆಯೋಜಿಸಲು ಉದ್ಧೇಶಿಸಿರುವ ಮಹೋತ್ಸವ ಅವಕಾಶ ನೀಡಬಾರದು. ಹಿಂದೂ ವಿರೋಧಿ ಮೋಹನ್ ಸಿ. ಲಾಝರಸ್ ಉಡುಪಿ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.
ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಮತಾಂತರಕ್ಕೆ ಪ್ರಚೋದನೆ ನೀಡುವ ಷಡ್ಯಂತ್ರವಾಗಿದ್ದು, ಜಿಲ್ಲೆಯಲ್ಲಿ ಧಾರ್ಮಿಕ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ.ಮೋಹನ್ ಸಿ. ಲಾಝರಸ್, ಈ ಹಿಂದೆ ಹಿಂದೂ ದೇವಾಲಯಗಳನ್ನು “ಸೈತಾನನ ನೆಲೆಗಳು” ಎಂದು ಹೇಳುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.ಇದಲ್ಲದೆ, ಲಾಝರಸ್ ಅವರ ‘ಜೀಸಸ್ ರಿಡೀಮ್ಸ್’ ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಉಲ್ಲಂಘಿಸಿ ವಿದೇಶಿ ಹಣವನ್ನು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು 2024ರ ಮಾರ್ಚ್ನಲ್ಲಿ ಸಂಸ್ಥೆಯ ಪರವಾನಗಿಯನ್ನು ಅಮಾನತುಗೊಳಿಸಿದೆ.
ಉಡುಪಿಯಲ್ಲಿ ಧಾರ್ಮಿಕ ಅಶಾಂತಿ ಮೂಡಿಸಲು ಪ್ರಯತ್ನಿಸಿದರೆ ಹಿಂಜಾವೇ ಸುಮ್ಮನೆ ಕೂರಲ್ಲ, ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಉಪಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿ ಘೋಷಣೆ!



















