ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಪ್ರಚೋದನಾತ್ಮಕ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಡೈಮಂಡ್ ಹಾರ್ಬರ್ ಕ್ಷೇತ್ರದ ಸಂಸದರಾಗಿರುವ ಅಭಿಷೇಕ್ ಬ್ಯಾನರ್ಜಿ, ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಏನಿದು ಹೇಳಿಕೆ?
ಸಾಮಾಜಿಕ ಕಾರ್ಯಕರ್ತ ರಾಜೀವ್ ಸರ್ಕಾರ್ ಎಂಬುವರು ಮೇ 5 ರಂದು ನೀಡಿದ ದೂರನ್ನು ಆಧರಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಏಪ್ರಿಲ್ 27 ಮತ್ತು ಮೇ 3ರ ನಡುವೆ ಅಭಿಷೇಕ್ ಬ್ಯಾನರ್ಜಿ ಹಲವು ಕಡೆಗಳಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ. ಏ.7ರಂದು ಕೋಲ್ಕತ್ತಾದಲ್ಲಿ ನಡೆದ ಚುನಾವಣಾ ಪೂರ್ವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅಭಿಷೇಕ್, “ಮೇ 4ರಂದು ಅವರನ್ನು ಯಾರು ಬಂದು ಉಳಿಸುತ್ತಾರೆ ಎಂದು ನಾನು ನೋಡುತ್ತೇನೆ. ದೆಹಲಿಯ ಯಾವ ಗಾಡ್ಫಾದರ್ ಅವರ ರಕ್ಷಣೆಗೆ ಬರುತ್ತಾರೋ ನಾನೂ ನೋಡುತ್ತೇನೆ” ಎಂದು ಹೇಳಿಕೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದ್ವೇಷ ಬಿತ್ತನೆ, ಗಲಭೆಗೆ ಪ್ರಚೋದನೆ, ಜೀವ ಬೆದರಿಕೆ ಮತ್ತು ಸುಳ್ಳು ಹೇಳಿಕೆಗಳನ್ನು ಹರಡಿದ ಆರೋಪಗಳ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ.
ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗುವ ಕೇವಲ ಒಂದು ದಿನದ ಮುನ್ನ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಲ್ಕತ್ತಾ ಹೈಕೋರ್ಟ್ಗೆ ಖುದ್ದಾಗಿ ಹಾಜರಾಗಿದ್ದರು. ಪಕ್ಷದ ಹಿರಿಯ ನಾಯಕರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರೊಂದಿಗೆ ನ್ಯಾಯಾಲಯಕ್ಕೆ ಬಂದಿದ್ದ ಅವರು, ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಮತ್ತು ಟಿಎಂಸಿ ಕಚೇರಿಗಳ ಮೇಲಿನ ದಾಳಿಗಳ ಬಗ್ಗೆ ವಾದ ಮಂಡಿಸಿದ್ದರು. ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಕನಿಷ್ಠ 10 ಜನರು ಕೊಲ್ಲಲ್ಪಟ್ಟಿದ್ದಾರೆ, ಪಕ್ಷದ 150ಕ್ಕೂ ಹೆಚ್ಚು ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ಸುಮಾರು 2,000 ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ಮಮತಾ ಕೋರ್ಟ್ಗೆ ತಿಳಿಸಿದ್ದರು. ಮಹಿಳೆಯರು, ಮಕ್ಕಳು ಮತ್ತು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಪೊಲೀಸರ ಸಮ್ಮುಖದಲ್ಲೇ ಕಚೇರಿಗಳನ್ನು ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ತಕ್ಷಣದ ನ್ಯಾಯಾಂಗ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದರು.
ಕಟ್ಟುನಿಟ್ಟಿನ ಕಾನೂನು ಸುವ್ಯವಸ್ಥೆಗೆ ಹೈಕೋರ್ಟ್ ಆದೇಶ
ಉಭಯ ಪಕ್ಷಗಳ ವಾದ ಆಲಿಸಿದ ಕಲ್ಕತ್ತಾ ಹೈಕೋರ್ಟ್ ಪೀಠವು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಕಾಪಾಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜಕೀಯ ಹಿಂಸಾಚಾರಕ್ಕೆ ಹೆದರಿ ಮನೆ ಬಿಟ್ಟು ಓಡಿಹೋಗಿರುವ ಸಾರ್ವಜನಿಕರು ಯಾವುದೇ ಪಕ್ಷಕ್ಕೆ ಸೇರಿದ್ದರೂ, ಅವರಿಗೆ ಸೂಕ್ತ ರಕ್ಷಣೆ ನೀಡಿ ಮತ್ತೆ ತಮ್ಮ ಮನೆಗಳಿಗೆ ಸುರಕ್ಷಿತವಾಗಿ ಮರಳುವಂತೆ ನೋಡಿಕೊಳ್ಳಬೇಕು ಎಂದು ಪೊಲೀಸರಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ಈ ಕುರಿತು ಮೂರು ವಾರಗಳ ಒಳಗೆ ಆಕ್ಷೇಪಣಾ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ನ್ಯಾಯಾಲಯ, ಟಿಎಂಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಸಿಂಧುತ್ವದ ಪ್ರಶ್ನೆಯನ್ನು ಮುಕ್ತವಾಗಿಟ್ಟು ವಿಚಾರಣೆಯನ್ನು ಮುಂದೂಡಿದೆ.


















