ಲಾತೂರು/ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ್ ಪಾಟೀಲ್ (90) ಅವರು ಶುಕ್ರವಾರ ನಿಧನರಾದರು. ಕಳೆದ ಕೆಲ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಹಾರಾಷ್ಟ್ರದ ಲಾತೂರ್ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಮೃತರು ಪುತ್ರ ಶೈಲೇಶ್ ಪಾಟೀಲ್, ಸೊಸೆ ಅರ್ಚನಾ ಹಾಗೂ ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಶಿವರಾಜ್ ಪಾಟೀಲ್ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ ಅನುಭವಿ ನಾಯಕರಾಗಿದ್ದರು. ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ 2004ರಿಂದ 2008ರವರೆಗೆ ಕೇಂದ್ರ ಗೃಹ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು. 2008ರಲ್ಲಿ ಮುಂಬೈನಲ್ಲಿ ನಡೆದ ಭೀಕರ 26/11 ಭಯೋತ್ಪಾದಕ ದಾಳಿಯ ನೈತಿಕ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ, 1991 ರಿಂದ 1996 ರವರೆಗೆ 10ನೇ ಲೋಕಸಭೆಯ ಸ್ಪೀಕರ್ ಆಗಿ ಅವರು ಸದನವನ್ನು ಮುನ್ನಡೆಸಿದ್ದರು. ತಮ್ಮ ರಾಜಕೀಯ ಜೀವನದ ನಂತರದ ದಿನಗಳಲ್ಲಿ, ಅಂದರೆ 2010 ರಿಂದ 2015 ರವರೆಗೆ ಅವರು ಪಂಜಾಬ್ನ ರಾಜ್ಯಪಾಲರಾಗಿ ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು.
ಪುರಸಭೆಯಿಂದ ಸಂಸತ್ತಿನವರೆಗೆ: ಸುದೀರ್ಘ ರಾಜಕೀಯ ಪಯಣ
1935 ರ ಅಕ್ಟೋಬರ್ 12 ರಂದು ಮಹಾರಾಷ್ಟ್ರದ ಲಾತೂರ್ನಲ್ಲಿ ಜನಿಸಿದ ಶಿವರಾಜ್ ಪಾಟೀಲ್, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ವಿಜ್ಞಾನ ಪದವಿ ಮತ್ತು ಮುಂಬೈ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು. ಲಾತೂರ್ ಪುರಸಭೆಯ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಅವರು, 1972ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ರಾಜ್ಯ ರಾಜಕಾರಣದಲ್ಲಿ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಮತ್ತು ಉಪಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದರು. 1980 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ ಅವರು, ಸತತ ಏಳು ಬಾರಿ (1980, 1984, 1989, 1991, 1996, 1998, 1999) ಸಂಸದರಾಗಿ ಆಯ್ಕೆಯಾದ ಹೆಗ್ಗಳಿಕೆ ಪಾತ್ರರಾಗಿದ್ದರು. ರಾಜೀವ್ ಗಾಂಧಿ ಸಂಪುಟದಲ್ಲಿ ರಕ್ಷಣೆ, ವಾಣಿಜ್ಯ, ವಿಜ್ಞಾನ ಮತ್ತು ತಂತ್ರಜ್ಞಾನದಂತಹ ಪ್ರಮುಖ ಖಾತೆಗಳನ್ನು ಅವರು ನಿಭಾಯಿಸಿದ್ದರು.
ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರ ಕಂಬನಿ
ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. “ಶಿವರಾಜ್ ಪಾಟೀಲ್ ಅವರ ನಿಧನ ಸುದ್ದಿ ಕೇಳಿ ದುಃಖವಾಗಿದೆ. ಅವರು ಶಾಸಕ, ಸಂಸದ, ಕೇಂದ್ರ ಸಚಿವ ಹಾಗೂ ಸ್ಪೀಕರ್ ಆಗಿ ದೀರ್ಘಕಾಲೀನ ಸೇವೆ ಸಲ್ಲಿಸಿದ ಅನುಭವಿ ನಾಯಕರಾಗಿದ್ದರು. ಕೆಲ ತಿಂಗಳ ಹಿಂದಷ್ಟೇ ಅವರು ನನ್ನ ನಿವಾಸಕ್ಕೆ ಭೇಟಿ ನೀಡಿದ್ದರು,” ಎಂದು ಮೋದಿ ಸ್ಮರಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎಕ್ಸ್ (ಟ್ವಿಟರ್) ತಾಣದಲ್ಲಿ ಸಂತಾಪ ಸೂಚಿಸಿದ್ದು, “ಪಾಟೀಲ್ ಅವರ ನಿಧನ ಸುದ್ದಿ ಅತ್ಯಂತ ನೋವಿನ ಸಂಗತಿ. ರಕ್ಷಣಾ ಸಚಿವಾಲಯ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಜವಾಬ್ದಾರಿ ಹೊತ್ತಿದ್ದ ಅವರು ದಶಕಗಳ ಕಾಲ ಜನಸೇವೆ ಮಾಡಿದ್ದಾರೆ. ಅವರ ಅಗಲಿಕೆ ಕಾಂಗ್ರೆಸ್ ಕುಟುಂಬಕ್ಕೆ ತುಂಬಲಾರದ ನಷ್ಟ,” ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಹಲವು ಗಣ್ಯರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಇದನ್ನೂ ಓದಿ: ಪ್ರತಿದಿನ ಒಬ್ಬೊಬ್ಬರು ಊಟಕ್ಕೆ ಕರದ್ರೆ ಬೇಡ ಅನ್ನೋಕಾಗುತ್ತಾ? | ಡಿಸಿಎಂ



















