ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಸುವ ಕುರಿತು ಇತ್ತೀಚೆಗಷ್ಟೇ ಮಾಹಿತಿ ಹೊರ ಬಿದ್ದಿತ್ತು. ಸದ್ಯ ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ.
ನಮ್ಮ ಮೆಟ್ರೋ ದರ ಏರಿಕೆಗಾಗಿ ಪ್ರಸ್ತಾವನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ. ಅನುಮತಿ ಬಂದ ನಂತರ ಆ ಕುರಿತು ನಿರ್ಧರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ಮೆಟ್ರೋ ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರದಿಂದ ಉತ್ತರ ಬರಬೇಕು. ಉತ್ತರ ಬಂದ ಮೇಲೆ ನಾವು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ, ಜಲ ಮಂಡಳಿಯಿಂದ ನೀರಿನ ದರ ಏರಿಕೆಯ ಕುರಿತು ಮಾತನಾಡಿದ ಅವರು, ಬೆಲೆ ಏರಿಕೆಯ ಪ್ರಸ್ತಾವನೆಯನ್ನು ಜಲಮಂಡಳಿಯವರು ಸಲ್ಲಿಸಿದ್ದಾರೆ. ಮುಂದಿನ ಕ್ಯಾಬಿನೆಟ್ ನಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಹೆಬ್ಬಾಳದ ಎಸ್ಟೀಮ್ ಮಾಲ್ ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ ಬಿಡಿಎ ನಿರ್ಮಾಣ ಮಾಡುತ್ತಿರುವ ಲೂಪ್ ಪ್ಲೈಓವರ್ ಕಾಮಗಾರಿಯನ್ನು ಏಪ್ರಿಲ್ ವೇಳೆಗೆ ಮುಗಿಸುವಂತೆ ಸೂಚನೆ ನೀಡಿದರು. ಅಲ್ಲದೇ, ಬಿಡಿಎ ಆಯುಕ್ತರಿಗೆ ಏಪ್ರಿಲ್ ವೇಳೆಗೆ ಕಾಮಗಾರಿ ಪೂರ್ತಿ ಮಾಡಿ, ಮೇಲ್ಸೇತುವೆಯನ್ನು ಲೋಕಾರ್ಪಣೆ ಮಾಡುವಂತೆ ಸೂಚಿಸಿದ್ದಾರೆ.