ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಝೆನ್-ಜಿ ವಿದ್ಯಾರ್ಥಿ ಸಂಘಟನೆಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮಾದರಿಯಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಸಜ್ಜಾಗಿದ್ದು, ಕೆಪಿಎಸ್ಸಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ನಡೆಸಿವೆ. ಈ ಬೆಳವಣಿಗೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ರಾಜಕೀಯ ಹಾಗೂ ಆಡಳಿತಾತ್ಮಕ ಸಂಕಷ್ಟವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿ, ಸಂಪೂರ್ಣ ಪಾರದರ್ಶಕವಾಗಿ ಮರು ನೇಮಕಾತಿ ನಡೆಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ನೇಮಕಾತಿ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ ತರಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿದೆ.
ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಕೂಡ ಬೆಂಬಲ ಸೂಚಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿದ್ಯಾರ್ಥಿ ಪ್ರತಿನಿಧಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ, ನಿನ್ನೆ ವಿಪಕ್ಷ ನಾಯಕರ ನೇತೃತ್ವದ ನಿಯೋಗ ಕೆಪಿಎಸ್ಸಿ ಅಧ್ಯಕ್ಷರನ್ನು ಭೇಟಿ ಮಾಡಿ ನೇಮಕಾತಿ ಅಕ್ರಮದ ಕುರಿತು ಚರ್ಚೆ ನಡೆಸಿದೆ. ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಕೆಪಿಎಸ್ಸಿ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಈಗಾಗಲೇ ಆಗ್ರಹಿಸಿದ್ದು, ಈ ವಿಚಾರವನ್ನು ರಾಜ್ಯ ಸರ್ಕಾರದ ವಿರುದ್ಧ ಪ್ರಮುಖ ಹೋರಾಟದ ಅಸ್ತ್ರವನ್ನಾಗಿ ಬಳಸಲು ಮುಂದಾಗಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲೂ ಕೆಪಿಎಸ್ಸಿ ಹಗರಣವನ್ನು ಪ್ರಮುಖವಾಗಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ.
ಒಟ್ಟಾರೆ, ನೀಟ್ ಮಾದರಿಯಲ್ಲಿ ಕೆಪಿಎಸ್ಸಿ ವಿರುದ್ಧ ವಿದ್ಯಾರ್ಥಿ ಹೋರಾಟ ರಾಜ್ಯಾದ್ಯಂತ ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿದ್ದು, ನೇಮಕಾತಿ ವಿವಾದ ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವಾಗುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ : ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ



















