ನವದೆಹಲಿ/ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ (IND vs SA) ನವೆಂಬರ್ 30 ರಂದು ರಾಂಚಿಯಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಮಾತನಾಡಿದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್, ತಂಡದ ಪ್ರಮುಖ ಆಟಗಾರರಾದ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಗಾಯದ ಕುರಿತು ಮಹತ್ವದ ಅಪ್ಡೇಟ್ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕುತ್ತಿಗೆ ನೋವಿಗೆ ತುತ್ತಾಗಿದ್ದ ಗಿಲ್, ಟೆಸ್ಟ್ ಸರಣಿಯಿಂದ ಮಾತ್ರವಲ್ಲದೆ ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮಾರ್ಕೆಲ್, “ನಾನು ಎರಡು ದಿನಗಳ ಹಿಂದಷ್ಟೇ ಗಿಲ್ ಜತೆ ಮಾತನಾಡಿದ್ದೇನೆ. ಅವರ ಕುತ್ತಿಗೆ ನೋವು ಕಡಿಮೆಯಾಗುತ್ತಿದ್ದು, ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸುತ್ತಿರುವುದು ಸಂತಸದ ವಿಷಯ,” ಎಂದು ತಿಳಿಸಿದರು.
ಶ್ರೇಯಸ್ ಅಯ್ಯರ್ ರಿಹ್ಯಾಬ್ ಶುರು
ಕಳೆದ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಕೂಡ ಚೇತರಿಕೆಯ ಹಾದಿಯಲ್ಲಿದ್ದಾರೆ. “ಶ್ರೇಯಸ್ ಅಯ್ಯರ್ ಈಗಾಗಲೇ ತಮ್ಮ ಪುನಶ್ಚೇತನ ಶಿಬಿರವನ್ನು (Rehab) ಆರಂಭಿಸಿದ್ದಾರೆ. ಇದು ಅದ್ಭುತ ಸಂಗತಿ. ಇಬ್ಬರೂ ಆಟಗಾರರು ಆರೋಗ್ಯವಾಗಿದ್ದಾರೆ ಮತ್ತು ಶೀಘ್ರದಲ್ಲೇ ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. ಅವರನ್ನು ಮತ್ತೆ ತಂಡಕ್ಕೆ ಸ್ವಾಗತಿಸಲು ನಾವು ಎದುರು ನೋಡುತ್ತಿದ್ದೇವೆ,” ಎಂದು ಮಾರ್ಕೆಲ್ ವಿಶ್ವಾಸ ವ್ಯಕ್ತಪಡಿಸಿದರು.
ರಾಹುಲ್ ಹೆಗಲಿಗೆ ನಾಯಕತ್ವ
ಗಿಲ್ ಮತ್ತು ಅಯ್ಯರ್ ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ (KL Rahul) ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಯುವ ಆಟಗಾರರಾದ ತಿಲಕ್ ವರ್ಮಾ ಮತ್ತು ಋತುರಾಜ್ ಗಾಯಕ್ವಾಡ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಗಿಲ್ ಗೈರುಹಾಜರಿಯಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 0-2 ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿದೆ. ಇದೀಗ ಏಕದಿನ ಸರಣಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಮೊದಲ ಏಕದಿನ ಪಂದ್ಯ ನವೆಂಬರ್ 30 ರಂದು ರಾಂಚಿಯ ಜೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ: IND vs SA 1st ODI : ರೋಹಿತ್ ಜೊತೆ ಜೈಸ್ವಾಲ್ಗೆ ಓಪನಿಂಗ್ ಚಾನ್ಸ್? ಋತುರಾಜ್ಗೆ ನಿರಾಸೆ ಸಾಧ್ಯತೆ


















