ಬೆಂಗಳೂರು : ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜಿರಾಫೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ‘ಶಿವಾನಿ’ ಎಂಬ ಹೆಸರಿನ ಹೆಣ್ಣು ಜಿರಾಫೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪ್ರಾಣಿ ಪ್ರಿಯರಲ್ಲಿ ಬೇಸರ ಮೂಡಿಸಿದೆ.
ಮೃತ ಜಿರಾಫೆ ಶಿವಾನಿಗೆ ಸುಮಾರು ಮೂರು ವರ್ಷ ಹತ್ತು ತಿಂಗಳು ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಿರಾಫೆಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಸರಿಯಾಗಿ ಆಹಾರ ಸೇವಿಸದ ಹಿನ್ನೆಲೆ ಶಿವಾನಿಯ ಆರೋಗ್ಯ ಹದಗೆಟ್ಟಿತ್ತು. ಕಳೆದ ಒಂದು ವಾರದಿಂದ ನಿರಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೂ ಸ್ಪಂದಿಸದೇ ಇಂದು ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿರಾಫೆಯ ಮರಣೋತ್ತರ ಪರೀಕ್ಷೆ ವೇಳೆ “ಸೀಕಲ್ ಟಾರ್ಷನ್” ಎಂಬ ಗಂಭೀರ ಸಮಸ್ಯೆ ಪತ್ತೆಯಾಗಿದೆ. ಕರುಳು ಸುತ್ತಿಕೊಂಡ ಪರಿಣಾಮ ರಕ್ತ ಪರಿಚಲನೆ ಸರಿಯಾಗಿ ಆಗದೇ ಸಾವಿಗೆ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಜಿರಾಫೆಯ ಮರಣೋತ್ತರ ಪರೀಕ್ಷೆ ಬಳಿಕ ಒಳಾಂಗಗಳ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಹೆಬ್ಬಾಳದ ಪ್ರಯೋಗಾಲಯಕ್ಕೆ ಮಾದರಿಗಳನ್ನು ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
2024ರ ಫೆಬ್ರವರಿಯಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಿಂದ ಶಿವಾನಿಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿತ್ತು. ಇದೀಗ ಜಿರಾಫೆಯ ಸಾವಿನಿಂದ ಉದ್ಯಾನವನ ಸಿಬ್ಬಂದಿ ಹಾಗೂ ಪ್ರಾಣಿ ಪ್ರಿಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ : ಬಿಮ್ಸ್ ಆಸ್ಪತ್ರೆಯಲ್ಲಿ ಖೈದಿ ಸಾವು ; ವೈದ್ಯರು, ಜೈಲ್ ಸಿಬ್ಬಂದಿ ವಿರುದ್ದ ಕುಟುಂಬಸ್ಥರ ಗಂಭೀರ ಆರೋಪ!


















