ಬೆಂಗಳೂರು : ರಾಜ್ಯದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳಾದ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಬಸ್ಗಳ ಟಿಕೆಟ್ ದರವನ್ನು ಪರಿಷ್ಕರಿಸುವ ದಿಸೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಟಿಕೆಟ್ ದರ ಏರಿಕೆ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿಯನ್ನು ರಚಿಸುವ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.
ಡೀಸೆಲ್ ದರ ಏರಿಕೆ, ಸಿಬ್ಬಂದಿ ವೇತನ ಹೆಚ್ಚಳ, ಬಿಡಿಭಾಗಗಳ ಬೆಲೆ ಏರಿಕೆ ಹಾಗೂ ಬಸ್ಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳು ಆರ್ಥಿಕ ಒತ್ತಡ ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ದರ ಪರಿಷ್ಕರಣೆ ಅನಿವಾರ್ಯ ಎಂಬ ಅಭಿಪ್ರಾಯವನ್ನು ಸಾರಿಗೆ ಇಲಾಖೆ ವ್ಯಕ್ತಪಡಿಸಿದೆ.
ಮೂಲಗಳ ಪ್ರಕಾರ, ರಚನೆಯಾಗಲಿರುವ ತಜ್ಞರ ಸಮಿತಿಗೆ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗುತ್ತದೆ. ಪ್ರಯಾಣಿಕರ ಮೇಲೆ ಅತಿಯಾದ ಹೊರೆ ಬೀಳದಂತೆ ಹಾಗೂ ನಿಗಮಗಳ ಆರ್ಥಿಕ ಸ್ಥಿತಿ ಸುಧಾರಿಸುವ ರೀತಿಯಲ್ಲಿ ದರ ಪರಿಷ್ಕರಣೆ ಕುರಿತು ಸಮಿತಿ ಶಿಫಾರಸು ಮಾಡಲಿದೆ.
ಬಿಎಂಟಿಸಿ ಶೇ.44ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೆ, ಕೆಎಸ್ಆರ್ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳು ಶೇ.33ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ ಎಂದು ತಿಳಿದುಬಂದಿದೆ.
ಸಮಿತಿ ವರದಿ ಸಲ್ಲಿಸಿದ ಬಳಿಕ ಅದರ ಶಿಫಾರಸ್ಸಿನ ಆಧಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸರ್ಕಾರದ ಅನುಮೋದನೆ ದೊರೆತರೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆ ಜಾರಿಗೆ ಬರುವ ಸಾಧ್ಯತೆ ಇದೆ.
ಇದನ್ನೂ ಓದಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NIT ಸಂಸ್ಥೆಯಲ್ಲಿ ನೇಮಕಾತಿ!



















