ಉಡುಪಿ : ಜಿಲ್ಲೆಯ ಬೈಂದೂರು ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪರಿಕೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಕುರಿತು ಪ್ರಾಯೋಗಿಕವಾಗಿ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿ ಕೃಷಿಯ ಅನುಭವ ಪಡೆದಿದ್ದು, “ರೈತ ದೇಶದ ಬೆನ್ನೆಲುಬು” ಎಂಬ ಸಂದೇಶವನ್ನು ಮಕ್ಕಳಿಗೆ ಮನದಟ್ಟು ಮಾಡುವ ಉದ್ದೇಶದಿಂದ ವಿದ್ಯಾರ್ಥಿ ಜೀವನದಲ್ಲೇ ಕೃಷಿಯ ಬಗ್ಗೆ ಆಸಕ್ತಿ, ಗೌರವ ಮತ್ತು ಅರಿವು ಬೆಳೆಸುವ ಪ್ರಯತ್ನ ನಡೆಸಲಾಯಿತು.
ಭತ್ತದ ಬೇಸಾಯದ ವಿವಿಧ ಹಂತಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಗಿದ್ದು, ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.
ಕಾರ್ಯಕ್ರಮದಲ್ಲಿ ಕಂಬದಕೋಣೆ ಕ್ಲಸ್ಟರ್ ಮಟ್ಟದ ಸಿಆರ್ಪಿ ರಮನಾಥ್ ಮೇಸ್ತ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಾಗೇಶ್ ಗಾಣಿಗ, ಜ್ಞಾನನಿಧಿ ಎಜುಕೇಶನಲ್ ಟ್ರಸ್ಟ್ (ರಿ.) ಚಪ್ಪರಿಕೆ ಪದಾಧಿಕಾರಿಗಳು, ಗ್ರಾಮದ ಹಿರಿಯರಾದ ನಾರಾಯಣ ಗಾಣಿಗ, ರಾಘವೇಂದ್ರ ಗಾಣಿಗ ಹಾಗೂ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು
ಇದನ್ನೂ ಓದಿ : ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಏರಿಕೆ ; ನದಿ ಪಾತ್ರದಲ್ಲಿ ಹೈ ಅಲರ್ಟ್!



















