ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ಬಳಿಕ ರಾಜ್ಯದ ರಾಜಕೀಯ ಬೆಳವಣಿಗೆಗಳ ಮೇಲೆ ಹೆಚ್ಚು ಗಮನ ಹರಿಸಿರುವ ಕುಮಾರಸ್ವಾಮಿ ಅವರು, ಸರ್ಕಾರದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸಿದ್ದಾರೆ. ಬಿಡದಿ ಟೌನ್ಶಿಪ್ ವಿಚಾರವನ್ನು ಪ್ರಮುಖ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಅವರು, ಅದರ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದು, ಈ ವಿಷಯವನ್ನು ದೆಹಲಿ ಮಟ್ಟದಲ್ಲೂ ಪ್ರಸ್ತಾಪಿಸುತ್ತಿದ್ದಾರೆ.
ಇನ್ನೊಂದೆಡೆ, ಎಸ್ಐಆರ್ ವಿಚಾರದಲ್ಲೂ ಜೆಡಿಎಸ್ ಆಕ್ರಮಗಳ ಆರೋಪ ಮಾಡುತ್ತಿದ್ದು, ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸುತ್ತಿರುವ ಕುಮಾರಸ್ವಾಮಿ, ದಾಖಲೆಗಳೊಂದಿಗೆ ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವ ಯೋಜನೆ ರೂಪಿಸಿದ್ದಾರೆ. ಎಸ್ಐಆರ್ ಲೋಪಗಳ ವಿರುದ್ಧ ಈಗಾಗಲೇ ಹೋರಾಟ ಆರಂಭಿಸಿರುವ ಅವರು, ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ.
ಇದರ ಜೊತೆಗೆ 2028ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕುಮಾರಸ್ವಾಮಿ, ಕ್ಷೇತ್ರವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕೋಲಾರ, ಮಧುಗಿರಿ, ರಾಮನಗರ, ಪಾವಗಡ, ರಾಯಚೂರು ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದು, ಉಪಚುನಾವಣೆ ನಡೆಯಲಿರುವ ಹಿರಿಯೂರು ಕ್ಷೇತ್ರದ ಮುಖಂಡರ ಸಭೆಯನ್ನೂ ನಡೆಸಿದ್ದಾರೆ. ಈ ಮೂಲಕ ಜೆಡಿಎಸ್ ಸಂಘಟನೆ ಬಲಪಡಿಸುವ ಜೊತೆಗೆ ರಾಜ್ಯ ರಾಜಕಾರಣದಲ್ಲಿ ಮತ್ತೆ ಪ್ರಮುಖ ಪಾತ್ರ ವಹಿಸಲು ಹೆಚ್ಡಿಕೆ ಮುಂದಾಗಿದ್ದಾರೆ ಎನ್ನಲಾಗಿದೆ
ಇದನ್ನೂ ಓದಿ : ಕೇಂದ್ರ ಸರ್ಕಾರದ 32 ಗುಂಟೆ ಭೂಮಿ ಒತ್ತುವರಿ ಆರೋಪ : Chairman Club ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!


















