ಬೆಂಗಳೂರು: ಬಿರು ಬೇಸಿಗೆಯ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.
ಸಿಲಿಕಾನ್ (Bengaluru) ಸಿಟಿಯಲ್ಲಿ ಕೂಡ ಮಳೆರಾಯ (Rainfall) ಮತ್ತೆ ಆರ್ಭಟ ಆರಂಭಿಸಿದ್ದಾನೆ. ಬುಧವಾರ ಬೆಂಗಳೂರಿನ ಹಲವೆಡೆ ಮಳೆಯಾಗುತ್ತಿದೆ. ಮಲ್ಲೇಶ್ವರಂ, ಮೆಜೆಸ್ಟಿಕ್, ಆನಂದ್ರಾವ್ ಸರ್ಕಲ್, ರೇಸ್ ಕೋರ್ಸ್ ಸುತ್ತಮುತ್ತ ಮಳೆಯಾಗುತ್ತಿದೆ. ಶಾಂತಿನಗರ, ಜಯನಗರ, ಕೆಆರ್ ಮಾರುಕಟ್ಟೆ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ಕೆಲಸ ಮುಗಿಸಿ ಹೋಗುತ್ತಿದ್ದ ಜನರು ಹೈರಾಣಾಗಿದ್ದಾರೆ.
ಮುಂದಿನ ಮೂರು ಗಂಟೆಗಳ ಕಾಲ ಸಿಲಿಕಾನ್ ಸಿಟಿ ಸೇರಿದಂತೆ ಹಾಸನ,ಬೆಂಗಳೂರು ಗ್ರಾಮಾಂತರ, ಕೊಡಗು ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬುಧವಾರ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಎಂಟು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 19 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮೇ 5ರ ವರೆಗೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.