ಧಾರವಾಡ : ಹಣ ಹೊಂದಿರುವ ಯುವಕರನ್ನೇ ಟಾರ್ಗೆಟ್ ಮಾಡಿ ಪ್ರೀತಿ ನಾಟಕವಾಡಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ ಯುವತಿಯನ್ನು ಸಾರ್ವಜನಿಕರು ಲಾಕ್ ಮಾಡಿದ ಘಟನೆ ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ಹೆಸರಿನಲ್ಲಿ ಪರಿಚಯ ಮಾಡಿಕೊಂಡು ಯುವಕರನ್ನು ಪ್ರೀತಿಯಲ್ಲಿ ಬೀಳಿಸಿ, ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿದ್ದಾಳೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಸಂಜು ದೊಡಮನಿ ಮತ್ತು ಗುರು ವಕ್ಕುಂದ್ ಸೇರಿದಂತೆ ಮೂವರು ಯುವಕರಿಗೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
ಈಗಾಗಲೇ ಮದುವೆಯಾಗಿದ್ದು, ಮಗುವೂ ಇದ್ದರೂ ಸಹ ಯುವಕರ ಜೊತೆ ಡೇಟಿಂಗ್ ನಡೆಸುತ್ತಿದ್ದಳು ಎಂಬ ಮಾಹಿತಿ ಹೊರಬಂದಿದೆ. ಗುರು ವಕ್ಕುಂದ್ ಎಂಬ ಯುವಕನನ್ನು ನಂಬಿಸಿ ಸುಮಾರು 7 ಲಕ್ಷ ರೂಪಾಯಿ ಪಡೆದುಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಐಶ್ವರ್ಯನೇ ಬೇಕೆಂದು ಮನನೊಂದು ಗುರು ವಕ್ಕುಂದ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಗುರುವಿನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದ ಐಶ್ವರ್ಯನನ್ನು ಗುರು ಕುಟುಂಬಸ್ಥರು ಲಾಕ್ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. 7 ಲಕ್ಷ ರೂಪಾಯಿ ಮರಳಿ ಕೊಡು, ಇಲ್ಲದಿದ್ದರೆ ಮದುವೆಯಾಗು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಈ ವೇಳೆ ಆಸ್ಪತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಐಶ್ವರ್ಯನನ್ನು ಕುಟುಂಬಸ್ಥರು ಹಾಗೂ ಸಾರ್ವಜನಿಕರು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಯಲಾಯ್ತು ವರನ ಅಸಲಿಯತ್ತು | ವಿವಾಹ ರದ್ದು



















