ರಾಯಚೂರು : ಬೈಕ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಘಟನೆಯಲ್ಲಿ, ಪ್ರೀತಮ್ (18) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಸಿದ್ದಯ್ಯ ಸ್ವಾಮಿ ಯರಡೋಣಿ (39) ಎಂಬವರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ.
ಆನಂದ ಪತ್ತರ್ ಸೇರಿದಂತೆ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಯ್ಯ ಸ್ವಾಮಿ ಹಾಗೂ ಆನಂದ ಪತ್ತಾರ್ ಅವರು ಕೆಲಸದ ನಿಮಿತ್ತ ಬೈಕ್ನಲ್ಲಿ ಪಟ್ಟಣದ ಹೊರವಲಯಕ್ಕೆ ತೆರಳಿದ್ದರು. ಬೈಕ್ನಲ್ಲಿ ಸಾಗುತ್ತಿರುವಾಗ, ಮತ್ತೊಂದು ಬೈಕ್ ಸವಾರರು ವೇಗವಾಗಿ ಬಂದು ಡಿಕ್ಕಿ ಹೊಡೆದಿರುವುದು ಘಟನೆ ಕಾರಣ ಎಂದು ತಿಳಿದುಬಂದಿದೆ.
ಘಟನೆ ನಡೆದ ಕೂಡಲೇ, ಸ್ಥಳೀಯರು ಗಾಯಗೊಂಡವರನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಪ್ರೀತಮ್ ಅದಾಗಲೇ ಮೃತಪಟ್ಟಿದ್ದರೆ, ಗಂಭೀರ ಸ್ಥಿತಿಯಲ್ಲಿದ್ದ ಸಿದ್ದಯ್ಯ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗುತ್ತಿತ್ತು. ಆದರೆ, ಮಾರ್ಗಮಧ್ಯದಲ್ಲೇ ಅವರು ಹುನಗುಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆಯಲ್ಲಿ, ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ‘ವಿಕಸಿತ್ ಬಿಹಾರ’ದ ಮೇಲೆ ನಂಬಿಕೆಯಿಟ್ಟ ಪ್ರತಿಯೊಬ್ಬ ಬಿಹಾರಿಗಳ ಗೆಲುವಿದು | ಅಮಿತ್ ಶಾ ಬಣ್ಣನೆ



















