ಮಂಗಳೂರು: ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಈ ದುರಂತದಲ್ಲಿ ವಿದ್ಯಾರ್ಥಿನಿಯರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ತಿಳಿದುಬಂದಿದೆ.
ಈ ಘಟನೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಚರಿಷ್ಮಾ ಮತ್ತು ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ ಎನ್ನಲಾಗಿದೆ.
ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ಮೊದಲು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.
ಬಿದ್ದ ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ – ಕೌಟುಂಬಿಕ ಕಲಹ ಶಂಕೆ!



















