ರಾಯಚೂರು: ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಸಿಂಧನೂರು (Sindhanuru) ತಾಲೂಕಿನ ಬೂದಿಹಾಳ (Budihal) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಾಮರಾಜನಗರ (Chamarajanagar) ಮೂಲದ ಅನುಪಮಾ (20) ಸಾವನ್ನಪ್ಪಿರುವ ಗರ್ಭಿಣಿ. ಅನುಪಮಾ ಕಳೆದ ಒಂದು ವರ್ಷದ ಹಿಂದೆ ಬೂದಿಹಾಳದ ನಾಗರಾಜ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಅಂತರ್ಜಾತಿ ವಿವಾಹದಿಂದಾಗಿ ಯುವಕನ ಮನೆಯವರು ಆಗಾಗ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಪತಿಯ ಮನೆಯವರ ಕಿರುಕುಳಕ್ಕೆ ಬೇಸತ್ತು ಅನುಪಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈಗ ಅನುಪಮಾ ಕುಟುಂಬಸ್ಥರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಪತಿ ಸೇರಿದಂತೆ 6 ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ಬಂಧಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.