ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಜಗಜ್ಜಾಹೀರಾಗಿದ್ದು, ದೆಹಲಿಯ ಹೈಕಮಾಂಡ್ ಅಂಗಳವೂ ತಲುಪಿದೆ. ಅದರಲ್ಲೂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೆಹಲಿಯಲ್ಲಿರುವಾಗಲೇ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರಿಗೆ ಬಿಜೆಪಿಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ (Show Cause Notice) ನೀಡಿರುವುದು ಭಾರಿ ಸಂಚಲನ ಮೂಡಿಸಿದೆ. ಶೋಕಾಸ್ ನೋಟಿಸ್ ಗೆ ಪ್ರತಿಕ್ರಿಯಿಸಿರುವ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ಪ್ರತಿಕ್ರಿಯಿಸುವೆ ಎಂದಿದ್ದಾರೆ.
ನನಗೆ ಅಧಿಕೃತವಾಗಿ ಯಾವುದೇ ನೋಟೀಸು ಬಂದಿರುವುದಿಲ್ಲ. ನೋಟೀಸು ಬಂದಮೇಲೆ ಕೆಲವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ಪಕ್ಷದ ವೈಫಲ್ಯಗಳನ್ನು ರಾಜ್ಯದ ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ಯತ್ನಾಳ್ ಪೋಸ್ಟ್ ಮಾಡಿದ್ದಾರೆ.
ಬಿಜೆಪಿ ಹೈಕಮಾಂಡ್ ನ ಶಿಸ್ತು ಪಾಲನಾ ಸಮಿತಿಯು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಮುಂದಿನ 72 ಗಂಟೆಯೊಳಗೆ ಉತ್ತರ ನೀಡಬೇಕು. ಹಾಗೊಂದು ವೇಳೆ ಉತ್ತರ ನೀಡದಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂಬುದಾಗಿ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಇದಕ್ಕೂ ಮೊದಲು ಕೂಡ ಯತ್ನಾಳ್ ಅವರಿಗೆ ಶಿಸ್ತು ಪಾಲನಾ ಸಮಿತಿಯು ನೋಟಿಸ್ ಜಾರಿಗೊಳಿಸಿತ್ತು. ಆಗೆಲ್ಲ, ಯತ್ನಾಳ್ ಅವರು ಈ ರೀತಿ ನಡೆದುಕೊಳ್ಳುವುದಿಲ್ಲ. ಪಕ್ಷವಿರೋಧಿ ಚಟುವಟಿಕೆ ಕೈಗೊಳ್ಳುವುದಿಲ್ಲ ಎಂಬುದಾಗಿ ಪ್ರತಿಕ್ರಿಯೆ ನೀಡಿದ್ದರು. ಪ್ರತಿಕ್ರಿಯೆ ನೀಡಿದ ಬಳಿಕವೂ ಬಂಡಾಯ ಸಾರಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಸರಕಾರಿ ಕಚೇರಿ ಉದ್ಘಾಟನೆ ನೆಪದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ಬಂಡಾಯ ನಾಯಕರು ದೆಹಲಿಗೆ ತೆರಳಿದ್ದಾರೆ. ಅಲ್ಲದೆ, ವಿಜಯೇಂದ್ರ ಅವರು ಕೂಡ ದೆಹಲಿಯಲ್ಲಿದ್ದು, ಹೈಕಮಾಂಡ್ ಬುಲಾವ್ ಮೇರೆಗೆ ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಇನ್ನು ಶೋಕಾಸ್ ನೋಟಿಸ್ ಗೆ ಯತ್ನಾಳ್ ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.