ಹುಬ್ಭಳ್ಳಿ : ನನಗೂ ಮುಖ್ಯಮಂತ್ರಿಯಾಗಲು ಆಸೆಯಿದೆ. ನಾನೇಕೆ ಆಗಬಾರದು? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಸಿಎಂಗೆ ಬಿಟ್ಟ ವಿಷಯಗಳು. ಸೂಕ್ತ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಎಲ್ಲಾ ಶಾಸಕರು ಸಚಿವರಾಗುವ ಬಯಕೆಯನ್ನು ಹೊಂದಿದ್ದಾರೆಂದು ಹೇಳಿದ್ದಾರೆ. ಈ ಮೂಲಕ ತಾವು ಕೂಡ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಆಸೆಯನ್ನು ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ಸಂಪುಟ ಪುನಾರಚನೆ ಮತ್ತು ಮೂರು ಉಪ ಮುಖ್ಯಮಂತ್ರಿ ಹುದ್ದೆಗಳ ರಚನೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಹೈಕಮಾಂಡ್ ಮತ್ತು ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಔತಣಕೂಟಗಳಿಗೆ ಕರೆಯುವುದು ಸಾಮಾನ್ಯ. ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಸಿಎಂ ಭೋಜನಕೂಟಕ್ಕೆ ಆಹ್ವಾನಿಸಿರುವುದು ಇದೇ ಮೊದಲೇನಲ್ಲ. ಅಧಿವೇಶನದ ಸಂದರ್ಭದಲ್ಲೂ ಡಿನ್ನರ್ ಮೀಟಿಂಗ್ ಕರೆಯುತ್ತಾರೆಂದು ತಿಳಿಸಿದ್ದಾರೆ.
ಇದೇ ವೇಳೆ ಪೊಲೀಸ್ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಕುರಿತು ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ 15,000 ಹುದ್ದೆಗಳು ಖಾಲಿ ಇದ್ದು, 4,600 ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ, 545 ಪಿಎಸ್ಐಗಳನ್ನು ನೇಮಕ ಮಾಡಿ ತರಬೇತಿ ನೀಡಲಾಗುತ್ತಿದೆ. 402 ಹೊಸ ಪಿಎಸ್ಐಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಇದಲ್ಲದೆ, ಇನ್ನೂ 600 ಪಿಎಸ್ಐಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದಿದ್ದಾರೆ.