ಬೆಂಗಳೂರು : ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ತಮ್ಮ ವಿರುದ್ಧ ಕೇಳಿಬಂದಿರುವ ಲಂಚ ಮತ್ತು ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿ, ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಆರೋಪ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಅವರು, ಯಾವುದಾದರೂ ಅಧಿಕಾರಿ.. ಸಚಿವ ಅಥವಾ ಮುಖ್ಯಮಂತ್ರಿಯ ಹೆಸರನ್ನು ದುರುಪಯೋಗ ಮಾಡಿಕೊಂಡು ಲಂಚ ಪಡೆದಿದ್ದರೆ, ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾನು ಯಾವ ತಪ್ಪು ಮಾಡಿದ್ದೇನೆ? ರಾಜೀನಾಮೆ ನೀಡುವ ಅಗತ್ಯವೇನಿದೆ? ಎಂದು ಆರ್.ಬಿ.ತಿಮ್ಮಾಪುರ ಪ್ರಶ್ನಿಸಿದ್ದಾರೆ.
ತಮ್ಮ ಹಾಗೂ ತಮ್ಮ ಪುತ್ರರ ಹೆಸರಿರುವ ಆಡಿಯೋ ಕುರಿತು ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಖರೀದಿಸುವ ಕುರಿತು ಹರಿದಾಡಿದ್ದ ಆಡಿಯೋ ನಂತರ ನಕಲಿ ಎಂದು ಸಾಬೀತಾಗಿದ್ದುದನ್ನು ಉದಾಹರಣೆಯಾಗಿ ನೀಡಿದರು.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹೊಸದೇನಲ್ಲ. ಜೆ.ಹೆಚ್. ಪಟೇಲ್, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೂ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹ ಆರೋಪಗಳು ಬಂದಿವೆ. ಆದರೆ, ಯಾರೂ ರಾಜೀನಾಮೆ ನೀಡಿಲ್ಲ ಎಂದು ಹೇಳಿದರು.
ಇದನ್ನೂ ಓದಿ : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್!?



















