ಮಂಡ್ಯ: ಬರೋಬ್ಬರಿ 11 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಗೆ ಪೊಲೀಸರು ಕಾಲಿಗೆ ಗುಂಡೇಟು ನೀಡಿ ಬಂಧಿಸಿರುವ ಘಟನೆ ನಡೆದಿದೆ.
ಮಳವಳ್ಳಿ (Mallavalli) ತಾಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ರೌಡಿಶೀಟರ್ ಮುತ್ತುರಾಜು ಅಲಿಯಾಸ್ ಡಕ್ಕ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಸಿದ್ದರಾಜು ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿಯನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಆರೋಪಿ ಡಕ್ಕನನ್ನು ಫೈರಿಂಗ್ ಮಾಡಲಾಗಿದೆ. ಮುತ್ತುರಾಜು ಅಲಿಯಾಸ್ ಡಕ್ಕ, ಕಾಂತರಾಜು ಎಂಬುವರ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಸಿಪಿಐ ಶ್ರೀಧರ್ ತನಿಖೆ ನಡೆಸುತ್ತಿದ್ದರು. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಕಾಂತರಾಜು ಕೊಲೆಗೆ ಮುತ್ತುರಾಜ ಅಲಿಯಾಸ್ ಡಕ್ಕ ಸುಪಾರಿ ನೀಡಿದ್ದು ಬಹಿರಂಗವಾಗಿತ್ತು. ಮಾಹಿತಿ ಆಧರಿಸಿ ಆತನನ್ನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಕಾನ್ಸ್ ಟೇಬಲ್ ಮೇಲೆ ಡ್ಯಾಗರ್ನಿಂದ ಹಲ್ಲೆ ಮಾಡಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಸಿಪಿಐ ಶ್ರೀಧರ್ ಆರೋಪಿ ಡಕ್ಕ ಬಲಗಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಮುತ್ತುರಾಜ ಅಲಿಯಾಸ್ ಡಕ್ಕ 11 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಮೂರು ಕೊಲೆ, ಮೂರು ಕೊಲೆಗೆ ಯತ್ನ, ಎರಡು ರಾಬರಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತ ಬೇಕಾಗಿದ್ದಾನೆ. 2019ರಿಂದ ರೌಡಿ ಕೃತ್ಯಗಳ ಮೂಲಕ ಹವಾ ಕ್ರಿಯೇಟ್ ಮಾಡಿಕೊಳ್ಳಲು ಯತ್ನಿಸುತ್ತಿದ್ದಾನೆ. ಆರೋಪಿ ಮುತ್ತುರಾಜ ಅಲಿಯಾಸ್ ಡಕ್ಕ ಇಸ್ಪೀಟ್ ದಂಧೆ ಕೂಡ ನಡೆಸುತ್ತಿದ್ದ ಎಂದು ಹೇಳಿದ್ದಾರೆ.