ನವದಹೆಲಿ: ‘ಆಪರೇಷನ್ ಸಿಂದೂರ’ದ ಬಳಿಕ ಆರಂಭವಾಗಿರುವ ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಸೇನಾ ಘರ್ಷಣೆ ನಿಲ್ಲಿಸಬೇಕು ಎಂದು ಅಮೆರಿಕ ಒತ್ತಾಯಿಸುತ್ತಿರುವಂತೆಯೇ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಭಾರತ ಎಂದಿಗೂ ‘ಜವಾಬ್ದಾರಿಯುತ ದೇಶ’ವಾಗಿಯೇ ವರ್ತಿಸುತ್ತದೆ ಎಂದು ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಅವರಿಗೆ ಸ್ಪಷ್ಟಪಡಿಸಿದ್ದಾರೆ.
ರೂಬಿಯೊ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಉದ್ವಿಗ್ನತೆಯನ್ನು ತಗ್ಗಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಎರಡೂ ದೇಶಗಳಿಗೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜೈಶಂಕರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಮೇ 8, 2025 ರಂದು, ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮೊದಲ ಬಾರಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಈ ಸಂಭಾಷಣೆಯ ವೇಳೆ, ರೂಬಿಯೊ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದರು ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಅಮೆರಿಕದ ಸಹಕಾರವನ್ನು ದೃಢಪಡಿಸಿದ್ದರು. ಆದರೆ, ದಕ್ಷಿಣ ಏಷ್ಯಾದಲ್ಲಿ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡಲು ತಕ್ಷಣವೇ ಉದ್ವಿಗ್ನತೆಯನ್ನು ತಗ್ಗಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.
ಈ ಕುರಿತು ಜೈಶಂಕರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಇಂದು ಸಂಜೆ ಯುಎಸ್ ವಿದೇಶಾಂಗ ಸಚಿವ ರುಬಿಯೋ ಅವರೊಂದಿಗೆ ಮಾತನಾಡಿದ್ದೇನೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಕೆಲಸ ಮಾಡುವ ಅಮೆರಿಕದ ಬದ್ಧತೆಯನ್ನು ನಾನು ಪ್ರಶಂಸಿಸುತ್ತೇನೆ. ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತವು ನಿಖರ ಪ್ರತಿಕ್ರಿಯೆ ನೀಡಿದೆ. ಯಾವುದೇ ಪ್ರಚೋದನೆಗೆ ನಾವು ದೃಢವಾಗಿ ಪ್ರತಿಕ್ರಿಯಿಸುತ್ತೇವೆ ಎಂದೂ ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.
ಇಂದು (ಶನಿವಾರ) ರುಬಿಯೊ ಅವರು ಜೈಶಂಕರ್ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಾಕ್ ಜತೆಗಿನ ಮಾತುಕತೆಯ ಸಾಧ್ಯತೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ.
ಉಗ್ರರನ್ನು ಪೋಷಿಸದಂತೆ ಸೂಚನೆ
ಮಾರ್ಕೊ ರೂಬಿಯೊ ಅವರು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರೊಂದಿಗೂ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ಸಂಭಾಷಣೆಯಲ್ಲಿ, ರೂಬಿಯೊ ಅವರು ಪಹಲ್ಗಾಮ್ ದಾಳಿಯ ತನಿಖೆಯಲ್ಲಿ ಪಾಕಿಸ್ತಾನ ಸಹಕಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಭಯೋತ್ಪಾದಕ ಗುಂಪುಗಳಿಗೆ ನೀಡುತ್ತಿರುವ ಬೆಂಬಲವನ್ನು ಕೊನೆಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಪಾಕ್ ಸರ್ಕಾರಕ್ಕೆ ಆದೇಶಿಸಿದ್ದಾರೆ ಎನ್ನಲಾಗಿದೆ.
ಅಮೆರಿಕದ ರಾಜತಾಂತ್ರಿಕ ಮಧ್ಯಸ್ಥಿಕೆ
ಮಾರ್ಕೊ ರೂಬಿಯೊ ಅವರ ಈ ಸಲಹೆಗಳು ಮುಖ್ಯವಾಗಿ “ತಕ್ಷಣದ ಉದ್ವಿಗ್ನತೆ ತಗ್ಗಿಸುವಿಕೆ”ಯ ಮೇಲೆ ಕೇಂದ್ರೀಕೃತವಾಗಿದ್ದು, ಅಮೆರಿಕವು ಭಾರತ-ಪಾಕ್ ಸಂಘರ್ಷವನ್ನು ತಣ್ಣಗಾಗಿಸಲು ಮಧ್ಯಸ್ಥಿಕೆ ವಹಿಸಲು ಮುಂದಾಗಿರುವ ಸುಳಿವನ್ನು ನೀಡಿದೆ. ರೂಬಿಯೊ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಅವರೊಂದಿಗೂ ಮಾತನಾಡಿದ್ದಾರೆ ಎಂದು ವರದಿಯಾಗಿದ್ದು, ಎರಡೂ ಕಡೆಯವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೆಜ್ಜೆಯಿಡಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.