ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯದ ಮುಜರಾಯಿ ವ್ಯಾಪ್ತಿಯಲ್ಲಿನ ಎಲ್ಲ ದೇಗುಲಗಳಲ್ಲಿ ಪ್ರಸಾದ ತಯಾರಿಗೆ ನಂದಿನಿ ತುಪ್ಪವನ್ನೇ ಬಳಸುವಂತೆ ಸುತ್ತೋಲೆ ಹೊರಡಿಸಿತ್ತು. ಈಗ ಮುಜರಾಯಿ ವ್ಯಾಪ್ತಿಯ ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯದಲ್ಲಿ ಪರಿಶೀಲನೆಗೆ ಒಳಪಡಿಸುವಂತೆ ಆದೇಶ ನೀಡಿದೆ.
ರಾಜ್ಯ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 34 ಸಾವಿರಕ್ಕೂ ಅಧಿಕ ದೇವಾಲಯಗಳು ಬರುತ್ತವೆ. 205 ದೇಗುಲಗಳ ವಾರ್ಷಿಕ ಆದಾಯ 25 ಲಕ್ಷ ರೂ.ಗಿಂತ ಹೆಚ್ಚಿದ್ದು, ವರ್ಗ-ಎ ಎಂದು ವರ್ಗೀಕರಿಸಲ್ಪಟ್ಟಿವೆ. 193 ದೇಗುಲಗಳನ್ನು 5 ಲಕ್ಷದಿಂದ ರೂ. 25 ಆದಾಯದೊಂದಿಗೆ ವರ್ಗ-ಬಿ ಎಂದು ಗುರುತಿಸಲಾಗಿದೆ. ಉಳಿದವುಗಳನ್ನು 5 ಲಕ್ಷ ರೂ. ಆದಾಯದೊಂದಿಗೆ ವರ್ಗ-ಸಿ ಎಂದು ವರ್ಗೀಕರಿಸಲಾಗಿದೆ. ಈ ಪೈಕಿ ಬಹುತೇಕ ದೇವಾಲಯಗಳಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿರುತ್ತದೆ. ಹೀಗಾಗಿ ಪ್ರಸಾದದ ಗುಣಮಟ್ಟ ಪರೀಕ್ಷೆಗೆ ಸರ್ಕಾರ ಸೂಚಿಸಿದೆ.
ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ರಾಜ್ಯದ ದೇವಾಲಯಗಳು ಭಕ್ತರಿಗೆ ಸುರಕ್ಷಿತ ಮತ್ತು ಆರೋಗ್ಯಕರ ಪ್ರಸಾದ ಮತ್ತು ಆಹಾರವನ್ನು ನೀಡುತ್ತವೆ. ಪ್ರಸಾದದ ವಿಚಾರದಲ್ಲಿ ಜನರಿಗೆ ಯಾವುದೇ ಅನುಮಾನ ಇರಬಾರದು. ಹೀಗಾಗಿ ಪ್ರಸಾದಗಳ ಪರೀಕ್ಷೆ ನಡೆಸುವಂತೆ ಸುತ್ತೋಲೆ ಹೊರಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ಈಗಾಗಲೇ ದೇವಾಲಯಗಳಲ್ಲಿ ದೀಪಗಳನ್ನು ಬೆಳಗಲು ಮತ್ತು ಪ್ರಸಾದ ತಯಾರಿಸಲು ನಂದಿನಿ ತುಪ್ಪ ಮಾತ್ರ ಬಳಸುವಂತೆ ನಿರ್ದೇಶನ ನೀಡಲಾಗಿದೆ.


















