ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷವೇ ದಿನೇದಿನೆ ಹೆಚ್ಚಾಗುತ್ತಿದೆ. ಪಾಕಿಸ್ತಾನದಿಂದ ಹಾರಿ ಬರುತ್ತಿರುವ ನೂರಾರು ಡ್ರೋನ್ ಗಳನ್ನು ಭಾರತೀಯ ಸೇನೆಯು ಆಗಸದಲ್ಲೇ ಹೊಡೆದುರುಳಿಸುತ್ತಿದೆ. ಇನ್ನು, ಪಾಕ್ ದಾಳಿಯ ಹಿನ್ನೆಲೆಯಲ್ಲಿ ಪಂಜಾಬ್, ಜಮ್ಮು-ಕಾಶ್ಮೀರ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇದರ ಬೆನ್ನಲ್ಲೇ, ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸುವ ಕುರಿತು ಮಾತುಗಳು ಕೇಳಿಬರುತ್ತಿವೆ. ಹಾಗಾಗಿ, ಐಪಿಎಲ್ ಚೇರ್ಮನ್ ಅರುಣ್ ಧುಮಾಲ್ ಕೊನೆಗೂ ಮೌನ ಮುರಿದಿದ್ದಾರೆ.
“ಸಂಘರ್ಷವು ದಿನೇದಿನೆ ಹೊರ ಸ್ವರೂಪ ಪಡೆದುಕೊಳ್ಳುತ್ತಿರುವ ಕಾರಣ ನಾವು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇವೆ. ಆದಾಗ್ಯೂ, ಐಪಿಎಲ್ ಟೂರ್ನಿಯನ್ನು ಸ್ಥಗಿತಗೊಳಿಸುವ ಕುರಿತು ಕೇಂದ್ರ ಸರ್ಕಾರವು ಇದುವರೆಗೆ ಯಾವುದೇ ನಿರ್ದೇಶನ ನೀಡಿಲ್ಲ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ. ಆ ಮೂಲಕ ಸದ್ಯಕ್ಕೆ ಐಪಿಎಲ್ ಟೂರ್ನಿ ಸ್ಥಗಿತಗೊಳಿಸುವ ತೀರ್ಮಾನ ತೆಗೆದುಕೊಂಡಿಲ್ಲ ಎಂಬುದನ್ನು ತಿಳಿಸಿದ್ದಾರೆ.
ವಿದೇಶಿ ಆಟಗಾರರು ಸೇರಿ ಎಲ್ಲ ಆಟಗಾರರು ಆಯಾ ಸ್ಟೇಡಿಯಂಗಳ ಹೋಟೆಲ್ ಗಳಲ್ಲಿ ಸುರಕ್ಷಿತವಾಗಿದ್ದಾರೆ. ಇದುವರೆಗೆ ಯಾವುದೇ ಬ್ಲ್ಯಾಕ್ ಔಟ್ ಘೋಷಣೆ ಮಾಡಿಲ್ಲ. ಹೋಟೆಲ್ ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆದಾಗ್ಯೂ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಬಿಸಿಸಿಐ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ.
ಭದ್ರತೆಯ ಕಾರಣದಿಂದಾಗಿ ಗುರುವಾರ ಧರ್ಮಶಾಲಾದಲ್ಲಿ ಆರಂಭವಾಗಿದ್ದ ಪಂಜಾಬ್ ಹಾಗೂ ಡೆಲ್ಲಿ ನಡುವಿನ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. ಭದ್ರತೆಯ ಕಾರಣದಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಇದಾದ ಬಳಿಕ ಆಟಗಾರರನ್ನು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸ್ಥಳಾಂತರ ಮಾಡಲಾಗಿತ್ತು. ಹಾಗಾಗಿ, ಐಪಿಎಲ್ ಟೂರ್ನಿಯನ್ನೇ ಸ್ಥಗಿತಗೊಳಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.