ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ. 2026-27ನೇ ಸಾಲಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರಿಂದಾಗಿ ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಹೆಚ್ಚಿನ ಕಾಲಾವಕಾಶ ದೊರೆತಂತಾಗಿದೆ. ಇದಕ್ಕೂ ಮೊದಲು ಮೇ 31 ವರ್ಗಾವಣೆ ಪ್ರಕ್ರಿಯೆಗೆ ಕೊನೆಯ ದಿನವಾಗಿತ್ತು.
ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕಳೆದ ಏಪ್ರಿಲ್ 13ರಂದು ಆದೇಶ ಹೊರಡಿಸಿತ್ತು. ಅದರ ಪ್ರಕಾರ, ಏಪ್ರಿಲ್ 15ರಿಂದ ಮೇ 31ರವರೆಗೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿತ್ತು. ಆದರೆ, ವರ್ಗಾವಣೆ ಪ್ರಕ್ರಿಯೆಯು ನಿಗದಿತ ಅವಧಿಯಲ್ಲಿ ಮುಗಿಯದ ಕಾರಣ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ಹಾಗಾಗಿ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರು ಈಗ ನಿರಾಳರಾಗಿದ್ದಾರೆ.
ರಾಜ್ಯ ಸರ್ಕಾರವು ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಆದ್ಯತೆ ನೀಡಿದೆ. ಅರ್ಜಿ ಸಲ್ಲಿಸುವ ಎಲ್ಲ ನೌಕರರೂ ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ವೈಯಕ್ತಿಕ ಮನವಿಗಳಿಗಿಂತ ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದೆ. ಮಾನವೀಯತೆ ದೃಷ್ಟಿಯಿಂದ ಕೆಲವು ಕಾರಣಗಳಿಗೆ ಮಾರ್ಗಸೂಚಿಯಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಆರೋಗ್ಯ ಸಮಸ್ಯೆಗಳು, ಮಹಿಳಾ ನೌಕರರು. ಗರ್ಭಿಣಿಯರ ಅರ್ಜಿಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ ಎಂದು ಕೂಡ ಮಾಹಿತಿ ನೀಡಿದೆ.
ಆದಾಗ್ಯೂ, ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಏಪ್ರಿಲ್ 13ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆಯ ನಿಯಮಗಳೇ ಈಗಲೂ ಅನ್ವಯವಾಗುತ್ತವೆ. ವರ್ಗಾವಣೆಗೊಂಡ ನೌಕರರಿಗೆ ಸೇವಾ ಅವಧಿ ಮತ್ತು ಹುದ್ದೆಯ ಶ್ರೇಣಿಗೆ ಅನುಗುಣವಾಗಿ ವರ್ಗಾವಣೆ ಭತ್ಯೆ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ ಎಂದು ತಿಳಿಸಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ EDII ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗಾವಕಾಶ



















