ಬೈಂದೂರು: ತಮಿಳುನಾಡಿನ ರಾಜಕೀಯ ನಾಯಕ ವಿಜಯ್ ಭೇಟಿ ಬಳಿಕ ಇದೀಗ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರದ ಅವರ ಮೊದಲ ಕ್ಷೇತ್ರ ಭೇಟಿ ಇದಾಗಿದ್ದು, ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಿಸಿದ ಸತೀಶನ್, ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ಅವರನ್ನು ಸನ್ಮಾನಿಸಿ ಗೌರವಿಸಿತು.

ಅವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. Z-ಪ್ಲಸ್ ಭದ್ರತೆಯಲ್ಲಿ ಆಗಮಿಸಿದ ಮುಖ್ಯಮಂತ್ರಿಯವರ ಸಂಚಾರಕ್ಕೆ ಅಗತ್ಯ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೂಜೆ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಹಲವು ರಾಜಕೀಯ ನಾಯಕರ ಆಧ್ಯಾತ್ಮಿಕ ನಂಬಿಕೆಯ ಕೇಂದ್ರವಾಗಿದೆ. ಚುನಾವಣೆ, ಅಧಿಕಾರ ಸ್ವೀಕಾರ ಅಥವಾ ಮಹತ್ವದ ರಾಜಕೀಯ ನಿರ್ಧಾರಗಳ ಮುನ್ನ ಅನೇಕ ನಾಯಕರು ದೇವಿಯ ದರ್ಶನ ಪಡೆಯುವುದು ಸಾಮಾನ್ಯ. ಇತ್ತೀಚೆಗೆ ವಿಜಯ್ ಭೇಟಿ ನೀಡಿದ್ದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಸತೀಶನ್ ಆಗಮನವೂ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಮತ್ತು ಸರ್ವ ಸದಸ್ಯರು, ಮಾಜಿ ಶಾಸಕರಾದ ಕೆ.ಗೋಪಾಲ್ ಪೂಜಾರಿ,
ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.



















