ಮಡಿಕೇರಿ : ಮಂಜಿನ ನಗರಿ ಮಡಿಕೇರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ರಾಜಾಸೀಟ್ ಗಾಜಿನ ಸೇತುವೆ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.
ಮಡಿಕೇರಿಯ ರಾಜಾಸೀಟ್ನಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಕರೆದಿತ್ತು.
ಡಿಪಿಆರ್ ತಯಾರಿಗೂ ಇಲಾಖೆ ಮುಂದಾಗಿತ್ತು. ಪರಿಸರವಾದಿಗಳು ಹಾಗೂ ಸ್ಥಳೀಯರಿಂದ ತೀವ್ರ ಆಕ್ರೋಶ ಕೇಳಿಬಂದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಇದೀಗ ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಇದಾಗಲೇ ಮಡಿಕೇರಿ ಗುಡ್ಡಕುಸಿತದಂತಹ ಅವಘಡಗಳನ್ನು ಎದುರಿಸಿತ್ತು. ಅನೇಕ ಸಾವು ನೋವುಗಳಾಗಿತ್ತು. ಈ ನಡುವೆಯೇ ನಿರ್ಮಿಸಲು ಹೊರಟಿದ್ದ ಗಾಜಿನ ಸೇತುವೆ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಇನ್ನು ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾಹಿತಿ ನೀಡಿದ್ದು, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.



















