ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ 52ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ರಾಜಾಜಿನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ವೇಳೆ ರವಿ ಕೃಷ್ಣಾರೆಡ್ಡಿ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಕ್ತದ ಅವಶ್ಯಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅನಿರೀಕ್ಷಿತ ಅಪಘಾತಗಳು, ಹೆಚ್ಚಿನ ರಕ್ತಸ್ರಾವ ಹಾಗೂ ತುರ್ತು ಚಿಕಿತ್ಸೆಯ ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ರಕ್ತ ದೊರೆಯದ ಕಾರಣ ಅನೇಕ ಅಮೂಲ್ಯ ಜೀವಗಳು ಕಳೆದುಹೋಗುತ್ತಿವೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕಾರಣದಿಂದಲೂ ರಕ್ತದ ಬೇಡಿಕೆ ಹೆಚ್ಚಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು ಎಂದು ಕರೆ ನೀಡಿದರು.
ಮುಂದುವರೆದು ಮಾತನಾಡಿದ ಅವರು , “ರಕ್ತದಾನವೇ ಮಹಾದಾನ” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಶ್ರೇಷ್ಠ ಸೇವೆಯಾಗಿದ್ದು, ಎಲ್ಲಾ ಅರ್ಹ ನಾಗರಿಕರು ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಗೌರವಾಧ್ಯಕ್ಷರ 52ನೇ ಜನ್ಮದಿನದ ಅಂಗವಾಗಿ ರಾಜ್ಯದಾದ್ಯಂತ ಕೆಆರ್ಎಸ್ ಪಕ್ಷದ ವತಿಯಿಂದ ರಕ್ತದಾನ ಶಿಬಿರಗಳು, ಸರ್ಕಾರಿ ಶಾಲಾ ಮಕ್ಕಳಿಗೆ ವಿಶೇಷ ಊಟದ ವ್ಯವಸ್ಥೆ, ಅನಾಥಾಶ್ರಮಗಳ ನಿವಾಸಿಗಳಿಗೆ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ತಿಳಿಸಿದರು.
ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಈ ಬೃಹತ್ ರಕ್ತದಾನ ಶಿಬಿರದಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯಸ್ವಾಮಿ, ಕೃಷ್ಣ ವಿ. ಬಿ., ರಘುನಂದನ್, ಆನಂದ್ ಹಾಗೂ ರಮೇಶ್ ಗೌಡ, ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ಯು. ಬಿ. ಮತ್ತು ನರಸಿಂಹಮೂರ್ತಿ, ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ್ ಆರ್., ಬೆಂಗಳೂರು ಪಶ್ಚಿಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಬೆಂಗಳೂರಿನ ವಿವಿಧ ಜಿಲ್ಲಾ, ವಿಧಾನಸಭೆ, ವಾರ್ಡ್ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು, ಸದಸ್ಯರು, ಬೆಂಬಲಿಗರು ಹಾಗೂ ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡಿದರು.
ಇದನ್ನೂ ಓದಿ : ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!



















