ನವದೆಹಲಿ: ಈ ವರ್ಷದ ಅಂತ್ಯದಲ್ಲಿ ಬಿಜೆಪಿಯ ಕೆಲವು ಬಾಗಿಲುಗಳು ಬಂದ್ ಆಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ತಮ್ಮ ಪಕ್ಷದಲ್ಲಿನ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಪಕ್ಷದ ಹೈಕಮಾಂಡ್ ನಾಯಕರನ್ನು ಬೇಟಿಯಾಗಲು ನವದೆಹಲಿಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಕರ್ನಾಟಕದಲ್ಲಿ ದೇವಾಲಯಗಳಿಗೂ ವಕ್ಫ್ ನೋಟಿಸ್ ನೀಡಿದ್ದಾರೆ. ವಕ್ಫ್ ವಿರುದ್ಧ ಮೂರು ತಂಡ ಮಾಡಿ ಅಹವಾಲು ಸ್ವೀಕರಿಸುತ್ತಿದ್ದೇವೆ. ಹೈಕಮಾಂಡ್ ನಾಯಕರು ನನಗೆ ಜವಾಬ್ದಾರಿ ನೀಡಿದ್ದಾರೆ. ದೆಹಲಿಗೆ ಬಂದು ಚಾಡಿ ಹೇಳುವ ಕೆಲಸ ಮಾಡಲ್ಲ. ಅಧ್ಯಕ್ಷನಾಗಿ ನಾನು ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತೇನೆ. ನನ್ನ ವಿರುದ್ಧ ದೂರು ನೀಡುವವರನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಈಗಾಗಲೇ ಸೋಲೊಪ್ಪಿಕೊಳ್ಳುವ ಮಾತುಗಳನ್ನಾಡಿದ್ದಾರೆ. ಶಿಗ್ಗಾಂವಿಯಲ್ಲಿ ಹೆಚ್ಚು ಮತಗಳ ಅಂತರದಲ್ಲಿ ಭರತ್ ಗೆಲ್ಲುತ್ತಾರೆ. ಸಂಡೂರಿನಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ಈ ವೇಳೆ ಭವಿಷ್ಯ ನುಡಿದಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತವಾಗಿದೆ. ಅದನ್ನೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮೈಸೂರಿನಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಶಾಸಕರ ಅಸಮಾಧಾನ ಭುಗಿಲೆದ್ದಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಆಗದಿದ್ದರೆ ಜನರ ಕ್ಷಮೆ ಕೇಳಿ, ಅದನ್ನು ಬಿಟ್ಟು ಬಡವರಿಗೆ ತೊಂದರೆ ಕೊಡಬೇಡಿ ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅನೇಕ ಹಗರಣಗಳು ನಡೆದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ, ಅಬಕಾರಿ ಹಗರಣ ಬೆಳಕಿಗೆ ಬಂದಿದೆ. ಲೋಕಾಯುಕ್ತವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಭೈರತಿ ಸುರೇಶ್ ಹೆಲಿಕಾಪ್ಟರ್ ನಲ್ಲಿ ದಾಖಲೆ ಹೊತ್ತೊಯ್ದಿದ್ದಾರೆ. ದಾಖಲೆಗಳನ್ನು ಅಧಿಕಾರಿಗಳ ಮೂಲಕ ನಾಶಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.