ಬೆಂಗಳೂರು: “ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಮೊದಲು ಆ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ. ಅವರು ಅಧಿಕಾರದಲ್ಲಿ ಇದ್ದಾಗ ಎರಡನೇ ವಿಮಾನ ನಿಲ್ದಾಣ ಮಾಡಲು ಯಾವುದೇ ಹೆಜ್ಜೆಯಿಡಲಿಲ್ಲ. ನಾವು ಈಗ ಹೆಜ್ಜೆ ಇಟ್ಟಿದ್ದೇವೆ” ಎಂದು ತಿರುಗೇಟು ನೀಡಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಕ್ರೆಡಿಟ್ ನ್ನು ದೇವೇಗೌಡರು, ಕುಮಾರಸ್ವಾಮಿ ಅವರು ತಗೆದುಕೊಳ್ಳುತ್ತಿರುವ ಬಗ್ಗೆ ಕೇಳಿದಾಗ,”ವಿಮಾನ ನಿಲ್ದಾಣವು ಬಿಡದಿ, ನೆಲಮಂಗಲ. ತುಮಕೂರು, ಸೋಲೂರು ಸೇರಿತಂದೆ ಯಾವ ಸ್ಥಳದಲ್ಲಿ ಬರಬೇಕು ಎಂಬುದನ್ನು ತೀರ್ಮಾನ ಮಾಡುವುದು ನಮ್ಮ ವ್ಯಾಪ್ತಿಯಲ್ಲಿಲ್ಲ. ಇದನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರು ತೀರ್ಮಾನ ಮಾಡುತ್ತಾರೆ. ಎರಡನೇ ವಿಮಾನ ನಿಲ್ದಾಣವನ್ನು ಇಂತಿಷ್ಟು ವರ್ಷಗಳ ಕಾಲ ನಿರ್ಮಾಣ ಮಾಡಬಾರದು ಎನ್ನುವ ಒಪ್ಪಂದವಿದೆ. ಆ ಎರಡು ಸಂಸ್ಥೆಗಳು ತೀರ್ಮಾನ ಮಾಡುತ್ತವೆ” ಎಂದರು.
“ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ ಸ್ಳಳ ಪರಿಶೀಲನೆ ನಡೆಯುತ್ತಿದೆ. ಅವರು ಮುಖ್ಯಮಂತ್ರಿಗಳು ಹಾಗೂ ನನ್ನ ಬಳಿ ಮಾತನಾಡಿ ಆನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಪ್ರಾಧಿಕಾರದ ಅನುಮತಿ ಪಡೆದು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.
“ವಿಮಾನ ನಿಲ್ದಾಣಕ್ಕೆ ಒಟ್ಟು 4,400 ಎಕರೆ ಭೂಮಿ ಬೇಕು ಎಂದು ಅಂದಾಜಿಸಲಾಗಿದೆ” ಎಂದು ತಿಳಿಸಿದರು.
“ಕೆಂಪೇಗೌಡ ವಿಮಾನ ನಿಲ್ದಾಣ ಮಾಡುವಾಗ ನಾನೇ ನಗರಾಭಿವೃದ್ದಿ ಸಚಿವನಾಗಿದ್ದೆ. ವಿಮಾನ ನಿಲ್ದಾಣ ಮಾಡಬೇಕು ಎಂದರೆ ಒಂದಷ್ಟು ತಾಂತ್ರಿಕ ವಿಚಾರಗಳು ಇರುತ್ತವೆ. ಅದರ ಆಧಾರದ ಮೇಲೆ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.
ವಿಮಾಣ ನಿಲ್ದಾಣಕ್ಕೆ ಒತ್ತಡವನ್ನು ಕುಮಾರಸ್ವಾಮಿ ಅವರೇ ತರುತ್ತಿದ್ದಾರೆ ಎಂದು ಕೇಳಿದಾಗ, “ಅವರ ಜಮೀನಿನ ಪಕ್ಕದವರು ಒತ್ತಾಯ ತರುತ್ತಾರೆ. ನಾನೂ ನನ್ನ ಜಮೀನು ಪಕ್ಕದಲ್ಲಿ ಇದ್ದವರಿಂದ ಮಾಡಿಕೊಳ್ಳುತ್ತೇನೆ” ಎಂದು ಮಾರ್ಮಿಕವಾಗಿ ನುಡಿದರು.
“ನಟ ಸುದೀಪ್ ಅವರದ್ದು ಸೌಜನ್ಯಯುತ ಭೇಟಿ. ಚಿತ್ರೀಕರಣಕ್ಕೆ ತೊಂದರೆಯಾದ ಕಾರಣಕ್ಕೆ ಬಂದಿದ್ದರು. ಸಂಬಂಧಪಟ್ಟವರಿಗೆ ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರು ಒಬ್ಬ ಗೆಳೆಯರಾಗಿ ಬಂದು ಭೇಟಿಯಾಗಿದ್ದಾರೆ” ಎಂದರು.