ಬೆಂಗಳೂರು : ಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತ ಸ್ಟ್ರಿಂಗ್ ಎನರ್ಜಿ ಡ್ರಿಂಕ್ ಹಾಗೂ ಇತರೆ ನಶೆ ಉಂಟುಮಾಡುವ ವಸ್ತುಗಳ ಮಾರಾಟವನ್ನು ನಿಷೇಧಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷ ಶಶಿಧರ್ ಕೋಸಂಬೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಶಾಲೆಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಸ್ಟ್ರಿಂಗ್ ಶಕ್ತಿವರ್ಧಕ ಪಾನೀಯಗಳು ಹಾಗೂ ಇತರೆ ನಶೆ ಉಂಟುಮಾಡುವ ವಸ್ತುಗಳ ಮಾರಾಟವನ್ನು ನಿಷೇಧಿಸಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಇದೇ ಮಾದರಿಯ ನಿಯಮವನ್ನು ಕರ್ನಾಟಕದಲ್ಲೂ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.
ಸ್ಟ್ರಿಂಗ್ ಮಾದರಿಯ ಪಾನೀಯಗಳಲ್ಲಿ ಕೃತಕ ಬಣ್ಣಗಳು, ರಾಸಾಯನಿಕಗಳು ಹಾಗೂ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ಪದಾರ್ಥಗಳು ಇರುವ ಸಾಧ್ಯತೆ ಇದೆ. ಇವುಗಳ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ ಎಂದು ಪತ್ರದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕಾಲೇಜುಗಳ 500 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಜೊತೆಗೆ ಸ್ಟ್ರಿಂಗ್ ಜ್ಯೂಸ್ ಮತ್ತು ಇಂತಹ ಪಾನೀಯಗಳ ಮಾರಾಟವನ್ನೂ ನಿಷೇಧಿಸಬೇಕು ಎಂದು ಶಶಿಧರ್ ಕೋಸಂಬೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್



















