ವಿಜಯನಗರ : 2026–27ನೇ ಶೈಕ್ಷಣಿಕ ಸಾಲಿನಡಿ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ಗಳ ಗುಣಮಟ್ಟದ ಬಗ್ಗೆ ವಿಜಯನಗರ ಜಿಲ್ಲೆಯಲ್ಲಿ ಗಂಭೀರ ಆರೋಪಗಳು ಕೇಳಿಬಂದಿವೆ. ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಲಾಗುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಎಸ್ಎಫ್ಐ (SFI) ಮತ್ತು ಡಿವೈಎಫ್ಐ (DYFI) ಸಂಘಟನೆಗಳು ಮಾಡಿವೆ. ಶಾಲಾ ಮಕ್ಕಳಿಗೆ ನೀಡಲಾಗಿರುವ ಶೂಗಳು ಸರಿಯಾದ ಗುಣಮಟ್ಟದಲ್ಲಿಲ್ಲ ಎಂದು ಆರೋಪಿಸಿ ಕೂಡಲೇ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಮಕ್ಕಳಿಗೆ ವಿತರಿಸಲಾದ ಶೂಗಳನ್ನು ಯಾವುದೇ ಕಂಪನಿಯ ಲೇಬಲ್ ಇಲ್ಲದ ಬಾಕ್ಸ್ಗಳಲ್ಲಿ ಹಾಕಿ ನೀಡಲಾಗಿದೆ. ಕೆಲವು ಶೂಗಳು ಮೊದಲೇ ಹರಿದಿರುವುದು, ಶೂಗಳ ಒಳಗಿನ ಲೇಸ್ಗಳು ಈಗಾಗಲೇ ಕಿತ್ತುಹೋಗಿರುವುದು ಕಂಡುಬಂದಿದೆ. ಸರ್ಕಾರದ ಹಣದಲ್ಲಿ ಖರೀದಿಸಲಾದ ಶೂಗಳ ಗುಣಮಟ್ಟ ಈ ಮಟ್ಟಕ್ಕೆ ಕುಸಿದಿರುವುದು ಆತಂಕಕಾರಿ ಎಂದು ಸಂಘಟನೆಗಳು ಆರೋಪಿಸಿವೆ.

ವಿಜಯನಗರ ಜಿಲ್ಲೆಯ ಹಲವೆಡೆ ಇದೇ ರೀತಿಯ ಕಳಪೆ ಶೂ ಮತ್ತು ಸಾಕ್ಸ್ಗಳನ್ನು ವಿತರಿಸಲಾಗಿದೆ ಎಂದು ಎಸ್ಎಫ್ಐ ಹಾಗೂ ಡಿವೈಎಫ್ಐ ಕಾರ್ಯಕರ್ತರು ಆರೋಪಿಸಿದ್ದಾರೆ. ಕಮಿಷನ್ ಆಸೆಗೆ ಕಳಪೆ ಗುಣಮಟ್ಟದ ಶೂಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿರುವ ಅವರು, ಈ ಖರೀದಿ ಪ್ರಕ್ರಿಯೆ ಮತ್ತು ವಿತರಣೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳಪೆ ಶೂ ಮತ್ತು ಸಾಕ್ಸ್ ಪೂರೈಕೆ ಮಾಡಿದ ಗುತ್ತಿಗೆದಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆಗೆ, ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿರುವ ಅಥವಾ ತಪ್ಪಿತಸ್ಥರಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಈ ಸಂಬಂಧ ವಿಜಯನಗರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ವೆಂಕಟೇಶ್ ರಾಮಚಂದಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ.

ಒಂದು ವೇಳೆ ಈ ಆರೋಪಗಳ ಬಗ್ಗೆ ತಕ್ಷಣ ತನಿಖೆ ನಡೆಸದೇ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಸ್ಎಫ್ಐ ಮತ್ತು ಡಿವೈಎಫ್ಐ ಕಾರ್ಯಕರ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಒದಗಿಸುವ ಜವಾಬ್ದಾರಿ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯದ್ದಾಗಿದ್ದು, ಮಕ್ಕಳ ಹಿತಾಸಕ್ತಿಗೆ ಧಕ್ಕೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.
ಇದನ್ನೂ ಓದಿ : ಸಿಎಂ ಡಿಕೆಶಿ, ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ದೆಹಲಿ ಪ್ರಯಾಣ : ಇಂದೇ ಸಚಿವರ ಪಟ್ಟಿ ರಿಲೀಸ್?


















