ಬೆಂಗಳೂರು: ಡೀಸೆಲ್ ದರ, ಟೋಲ್ ಹೆಚ್ಚಳ, ಆರ್ ಟಿಓ ಕಿರುಕುಳ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ.
ಆದರೂ ಲಾರಿ ಮುಷ್ಕರಕ್ಕೆ ಕಾಂಗ್ರೆಸ್ ಸರ್ಕಾರ ಕ್ಯಾರೆ ಅನ್ನುತ್ತಿಲ್ಲ. ಇನ್ನೊಂದೆಡೆ ಲಾರಿ ಮುಷ್ಕರದಿಂದಾಗಿ ಅಗತ್ಯ ವಸ್ತುಗಳ ಬೇಡಿಕೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ನಾಳೆಯಿಂದ ಮತ್ತಷ್ಟು ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಲಾರಿ ಮಾಲೀಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಕ್ಯಾರೆ ಅನ್ನದ ಹಿನ್ನೆಲೆಯಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ ಇಂದು ಲಾರಿ ಮಾಲೀಕರ ಸಭೆ ಕರೆದಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಯ ಅಧ್ಯಕ್ಷರಿಗೆ ಸಭೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆಗೆ ಸ್ವಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಉಗ್ರ ಹೋರಾಟಕ್ಕೆ ಕೈಗೊಳ್ಳುವಂತೆ ಸಲಹೆ ನೀಡುವ ಸಾಧ್ಯತೆ ಇದೆ.