ನವದೆಹಲಿ: ಮುಂಬರುವ ಟಿ20 ವಿಶ್ವಕಪ್ಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಭರ್ಜರಿ ಎಂಟ್ರಿ ಕೊಟ್ಟಿದ್ದರೆ, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸ್ಟಾರ್ ಆಲ್-ರೌಂಡರ್ ವಾಷಿಂಗ್ಟನ್ ಸುಂದರ್ ಸರಣಿಯಿಂದ ಹೊರಬಿದ್ದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ (ಜ.16) ಪರಿಷ್ಕೃತ ತಂಡವನ್ನು ಪ್ರಕಟಿಸಿದ್ದು, ಹಲವು ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.
ಗಾಯದ ಸಮಸ್ಯೆ : ವಾಷಿಂಗ್ಟನ್ ಸುಂದರ್, ತಿಲಕ್ ವರ್ಮಾ ಔಟ್
ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ಜನವರಿ 11ರಂದು ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಬೌಲಿಂಗ್ ಮಾಡುವಾಗ ವಾಷಿಂಗ್ಟನ್ ಸುಂದರ್ ಪಕ್ಕೆಲುಬಿನ ಕೆಳಭಾಗದ ನೋವಿಗೆ ತುತ್ತಾಗಿದ್ದರು. ಸ್ಕ್ಯಾನಿಂಗ್ ವರದಿ ಮತ್ತು ತಜ್ಞರ ಸಲಹೆಯ ಮೇರೆಗೆ ಅವರಿಗೆ ಕೆಲವು ದಿನಗಳ ವಿಶ್ರಾಂತಿ ಸೂಚಿಸಲಾಗಿದೆ. ಚೇತರಿಕೆಗಾಗಿ ಅವರು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ಗೆ ತೆರಳಲಿದ್ದಾರೆ.
ವಾಷಿಂಗ್ಟನ್ ಸುಂದರ್ ಬದಲಿಗೆ ಮಾಜಿ ವಿಶ್ವ ನಂಬರ್ 1 ಟಿ20 ಬೌಲರ್ ರವಿ ಬಿಷ್ಣೋಯಿ ಅವರನ್ನು ಆಯ್ಕೆ ಸಮಿತಿ ತಂಡಕ್ಕೆ ಸೇರಿಸಿಕೊಂಡಿದೆ. ಇನ್ನು, ಹೈದರಾಬಾದ್ ಪರ ವಿಜಯ್ ಹಜಾರೆ ಟ್ರೋಫಿ ಆಡುವಾಗ ಅನಾರೋಗ್ಯಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ ಕೂಡ ಸರಣಿಯಿಂದ ಹೊರಗುಳಿದಿದ್ದಾರೆ.
ಐಪಿಎಲ್ ಫಾರ್ಮ್ ನೆರವಿನಿಂದ ಅಯ್ಯರ್ ‘ರೀ-ಎಂಟ್ರಿ’
2023ರ ಆಸ್ಟ್ರೇಲಿಯಾ ಸರಣಿಯ ನಂತರ ಇದೇ ಮೊದಲ ಬಾರಿಗೆ ಶ್ರೇಯಸ್ ಅಯ್ಯರ್ ಭಾರತದ ಟಿ20 ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 2024ರ ಟಿ20 ವಿಶ್ವಕಪ್ಗೂ ಮುನ್ನ ತಂಡದಿಂದ ಕೈಬಿಡಲ್ಪಟ್ಟಿದ್ದ ಅಯ್ಯರ್, ಐಪಿಎಲ್ನಲ್ಲಿ ತೋರಿದ ಅದ್ಭುತ ಪ್ರದರ್ಶನದಿಂದ ಮತ್ತೆ ಆಯ್ಕೆಗಾರರ ಗಮನ ಸೆಳೆದಿದ್ದಾರೆ.
2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ ಅಯ್ಯರ್, 2025ರ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದರು. ಕಳೆದ ಐಪಿಎಲ್ ಆವೃತ್ತಿಯಲ್ಲಿ 175ರ ಸ್ಟ್ರೈಕ್ ರೇಟ್ನಲ್ಲಿ 604 ರನ್ ಸಿಡಿಸಿ ಅಬ್ಬರಿಸಿದ್ದರು. ಗಾಯಗೊಂಡಿರುವ ತಿಲಕ್ ವರ್ಮಾ ಬದಲಿಗೆ ಮೊದಲ ಮೂರು ಟಿ20 ಪಂದ್ಯಗಳಿಗೆ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ವಿಶ್ವಕಪ್ ತಂಡಕ್ಕೆ ಎಂಟ್ರಿ ಕಷ್ಟ?
2026ರ ಟಿ20 ವಿಶ್ವಕಪ್ಗೆ ಇನ್ನು ಒಂದು ತಿಂಗಳು ಬಾಕಿಯಿದ್ದು, ಟೀಂ ಇಂಡಿಯಾ ಈಗಾಗಲೇ ತನ್ನ 15 ಸದಸ್ಯರ ಅಂತಿಮ ತಂಡವನ್ನು ಪ್ರಕಟಿಸಿದೆ. ಶ್ರೇಯಸ್ ಅಯ್ಯರ್ ಕಿವೀಸ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ನೇರವಾಗಿ ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗುವುದು ಅನುಮಾನ.
ಭಾರತೀಯ ಪಿಚ್ಗಳಲ್ಲಿ ಸ್ಪಿನ್ ಬೌಲಿಂಗ್ ಅನ್ನು ಸಮರ್ಥವಾಗಿ ಎದುರಿಸುವ ಅಯ್ಯರ್ ಅವರ ಸಾಮರ್ಥ್ಯ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ವಿಶ್ವಕಪ್ ಟೂರ್ನಿಯ ಸಂದರ್ಭದಲ್ಲಿ ಯಾರಿಗಾದರೂ ಗಾಯವಾದರೆ, ಬದಲಿ ಆಟಗಾರನಾಗಿ ಅಯ್ಯರ್ ಮೊದಲ ಆಯ್ಕೆಯಾಗುವ ಸಾಧ್ಯತೆಯಿದೆ. ಈ ಸರಣಿಯು ಅವರಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಒಂದು ವೇದಿಕೆಯಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕ್ ಕೀಪರ್), ಶ್ರೇಯಸ್ ಅಯ್ಯರ್ (ಮೊದಲ 3 ಪಂದ್ಯಗಳಿಗೆ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಇಶಾನ್ ಕಿಶನ್ (ವಿಕ್ ಕೀಪರ್), ರವಿ ಬಿಷ್ಣೋಯಿ.
ಇದನ್ನೂ ಓದಿ; ಮಾಜಿ ನಿರ್ದೇಶಕ ಸಾರ್ವಜನಿಕವಾಗಿ ಕ್ಷಮೆ ಕೇಳದಿದ್ದರೆ ಮುಷ್ಕರ ಮುಂದುವರಿಕೆ | ಬಾಂಗ್ಲಾ ಕ್ರಿಕೆಟ್ನಲ್ಲಿ ಬಿಕ್ಕಟ್ಟು



















