ಮೈಸೂರು : ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್ ಮತ್ತು 5ನೇ ಕ್ರಾಸ್ನಲ್ಲಿರುವ ಸಂತೋಷ್ ಎಂಬುವವರ ಕಾರಿಗೆ ಮಧ್ಯರಾತ್ರಿ ಏಕಕಾಲದಲ್ಲಿ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿಯುತ್ತಿದ್ದ ಕಾರನ್ನು ಕಂಡು ಅಕ್ಕಪಕ್ಕದ ನಿವಾಸಿಗಳು ನೀರು ಎರಚಿ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ. ಕಾರುಗಳಿಗೆ ಬೆಂಕಿ ಹಾಕಿದ ಪರಿಣಾಮ ಸುಟ್ಟು ಕರಕಲಾಗಿವೆ.
ಗಾಂಜಾದ ನಶೆಯಲ್ಲಿ ಈ ಕೃತ್ಯಗಳು ನಡೆಯುತ್ತಿವೆ. ಪಟ್ಟಣದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡಿನಲ್ಲಿ ಬೀಟ್ ಪೊಲೀಸ್ ಇಲ್ಲದೇ ಇಂತಹ ಘಟನೆಗಳು ನಡೆಯುತ್ತಿವೆ. ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ದುಷ್ಕರ್ಮಿಗಳ ಹೆಡೆಮುರಿ ಕಟ್ಟಬೇಕಿದೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಉಡುಪಿ | ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಸಾವು



















