ಬೆಂಗಳೂರು: ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯು ಸಾಕಷ್ಟು ಮಹಿಳೆಯರಿಗೆ ಅನುಕೂಲ ಮಾಡಿದೆ. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಹಲವು ರೀತಿ ಉಪಯೋಗವಾಗಿರುವ ಬೆಳಕಿಗೆ ಬರುತ್ತಲೇ ಇದ್ದವು. ಈಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದ್ದು, ಸರ್ಕಾರ ಸಂತಸ ಪಡುತ್ತಿದೆ.
ಗದಗ ಜಿಲ್ಲೆಯಲ್ಲಿ ಅತ್ತೆ – ಸೊಸೆ ಬೋರ್ ವೆಲ್ ಕೊರೆಯಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದು, ಮಹಿಳೆಯರಿಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿರೋಧ ಪಕ್ಷಗಳು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ, ಸೊಸೆ ನಡುವೆ ಜಗಳ ಉಂಟಾಗುತ್ತದೆ ಎಂದು ಟೀಕೆ ಮಾಡಿದ್ದರು. ಆದರೆ ವಾಸ್ತವವೇ ಬೇರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಕೊಳವೆ ಬಾವಿ ಕೊರೆಸಿದ್ದಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎನ್ನುವುದಕ್ಕೆ ಇದೊಂದು ನಿದರ್ಶನವಾಗಿದೆ. ನಮ್ಮ ದೃಢಸಂಕಲ್ಪ ಜನಪರವಾಗಿದ್ದು, ಗ್ಯಾರಂಟಿಗಳಿಂದ ಜನರಿಗೆ ಹೆಚ್ಚು ಅನುಕೂಲವಾಗಿದೆ ಎನ್ನುವ ಸಾರ್ಥಕತೆ ಇದೆ ಎಂದು ಸಂತಸ ಪಟ್ಟಿದ್ದಾರೆ.
ಮಾಬುಬೀ, ಸೊಸೆ ರೋಷನ್ ಬೇಗಂ ಗೃಹಲಕ್ಷ್ಮಿ ಯೋಜನೆ ಹಣವನ್ನು ಪ್ರತಿ ತಿಂಗಳು ಕೂಡಿಟ್ಟಿದ್ದಾರೆ. ಹೀಗೆ ಕೂಡಿಟ್ಟ 44 ಸಾವಿರ ರೂ. ಅನ್ನು ಬೋರ್ವೆಲ್ ಕೊರಿಸಿದ್ದಾರೆ.