ಬೆಂಗಳೂರು : ಪೊಲೀಸ್ ಮತ್ತು ಸೇನಾ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್ಐಎಲ್ (MSIL) ವತಿಯಿಂದ ಸೂಪರ್ ಮಾರ್ಕೆಟ್ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಎಂ.ಬಿ ಪಾಟೀಲ್ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಇಂದು ಪ್ರಾಥಮಿಕ ಸುತ್ತಿನ ಸಭೆ ನಡೆಸಿದ್ದಾರೆ \
ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜೊತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್ ಮಾರ್ಕೆಟ್ ಮಳಿಗೆ ಆರಂಭಿಸುವ ಸಾಧ್ಯಾ ಸಾಧ್ಯತೆ ಇದೆ. ಈ ಕುರಿತು ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್ಐಎಲ್ಗೆ ಸೂಚಿಸಲಾಗಿದೆ ಎಂದಿದ್ದಾರೆ.
ಎಂಎಸ್ಐಎಲ್ ಸೂಪರ್ ಮಾರ್ಕೆಟ್ನಲ್ಲಿ ನಮ್ಮ ಸರ್ಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾದರೆ ಚೆನ್ನಾಗಿರುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.


















