ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮತ್ತೆ ಮುಡಾ ಹಗರಣದ ಸಂಕಷ್ಟ ಶುರುವಾಗಿದೆ. ಈಗ ಹೈಕೋರ್ಟ್ ವಿಭಾಗೀಯ ಪೀಠ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದೆ.
ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ (Muda Scam) ತನಿಖೆಯನ್ನು ಸಿಬಿಐಗೆ (CBI) ನೀಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ನೀಡಿದೆ.
ಸಿಎಂ ಸಿದ್ದರಾಮಯ್ಯ (Siddaramaiah), ಪತ್ನಿ ಬಿ.ಎಂ.ಪಾರ್ವತಿ, ಭಾವಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂಮಾಲೀಕ ದೇವರಾಜುಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿದ್ದು, ಪಾರದರ್ಶಕ ತನಿಖೆಯಾಗುತ್ತಿಲ್ಲ. ಹೀಗಾಗಿ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ನಿರಾಕರಿಸಿತ್ತು.
ಹೀಗಾಗಿ ಸ್ನೇಹಮಯಿ ಕೃಷ್ಣ, ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯ ಸಂಬಂಧ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದ ಮಲ್ಲಿಕಾರ್ಜನ ಸ್ವಾಮಿ, ಭೂಮಾಲೀಕ ದೇವರಾಜು, ಸಿಬಿಐ, ಕೇಂದ್ರ ಗೃಹ ಇಲಾಖೆ, ಲೋಕಾಯುಕ್ತ ಪೊಲೀಸರಿಗೂ ನೋಟಿಸ್ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಏ. 28ಕ್ಕೆ ಮುಂದೂಡಿದೆ.