ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸೋಲಾಗಿದೆ. ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, ಇಂದು ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಮುಂದಿನ ನಡೆ ಸೇರಿದಂತೆ, ಕೋರ್ಟ್ ನಿರ್ಣಯದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೆ. ಪರ ಹಾಗೂ ವಿರೋಧ ವಾದ ನಡೆದು ನಾನು ಹಾಕಿದ್ದ ರಿಟ್ ಅರ್ಜಿಯ ಮೇಲೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ರಾಜ್ಯಪಾಲರು ದೂರುದಾರರ ದೂರಿನ ಮೇಲೆ 17ಎ, 218 ಬಿಎನ್ ಎಸ್ ಹಾಗೂ 19 ಪಿಸಿ ಆಕ್ಟ್ ಅಡಿಯಲ್ಲಿ ತನಿಖೆಗೆ ಅನುಮತಿ ಕೊಡಿ ಎಂದು ಕೇಳಿದ್ದರು. ಆದರೆ, “ಹೈಕೋರ್ಟ್ 17 ಎಗೆ ಮಾತ್ರ ಸೀಮಿತಗೊಳಿಸಿದೆ. 218 ಬಿಎನ್ಎಸ್ (ಭಾರತೀಯ ನ್ಯಾಯ ಸಂಹಿತೆ) ಯನ್ನು ಸಂಪೂರ್ಣ ತಿರಸ್ಕಾರ ಮಾಡಿದೆ. ಪ್ರಾಸಿಕ್ಯೂಷನ್ಗೆ ನ್ಯಾಯಾಲಯ ಅನುಮತಿ ಕೊಟ್ಟಿಲ್ಲ. ಬದಲಾಗಿ 17ಎ ಪಿಸಿ ಆಕ್ಟ್ ಪ್ರಕಾರ ತನಿಖೆಗೆ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.
ನಾನು ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರಕ್ಕೆ ನಾನು ಹೆದರಲ್ಲ. ಇವರ ಸಂಚು, ರಾಜಭವನದ ದುರ್ಬಳಕೆಗೆ ಹೆದರಲ್ಲ. ಕರ್ನಾಟಕದ ಜನರ ಆಶೀರ್ವಾದ ನಮ್ಮ ಮೇಲಿದೆ. ನಮ್ಮ ಜೊತೆಗೆ ಡಿಸಿಎಂ, ಸಚಿವರು, ಶಾಸಕರು, ಕಾರ್ಯಕರ್ತರು ಮತ್ತು ಹೈಕಮಾಂಡ್ ಇದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಕೋರ್ಟ್ ಅರ್ಜಿ ಮಾಡಿದರೆ, ನಾನು ತಪ್ಪು ಮಾಡಿದ್ದೇನೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.
ಕಾನೂನು ಹೋರಾಟ ಮುಂದುವರಿಸಲು ಹೈಕಮಾಂಡ್ ಎಲ್ಲಾ ರೀತಿಯ ಸಹಕಾರ ಕೊಡಲಿದೆ. ಮೋದಿ ನೇತೃತ್ವದ ಸರ್ಕಾರ ಇಡೀ ದೇಶದಲ್ಲಿ ದ್ವೇಷದ ರಾಜಕೀಯ ಮಾಮಡುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಗಳಿಗೆ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲು ಆಗಲಿಲ್ಲ. ಹೀಗಾಗಿ ದ್ವೇಷದಿಂದ ಈ ರೀತಿ ಮಾಡುತ್ತಿವೆ ಎಂದು ಗುಡುಗಿದ್ದಾರೆ.
ನಾವು 136 ಗೆದ್ದಿದ್ದರಿಂದಾಗಿ ಬಿಜೆಪಿಗೆ ಆಪರೇಷನ್ ಕಮಲ ಮಾಡಲು ಆಗುತ್ತಿಲ್ಲ. ಬಡವರ ಪರವಾದ ನಮ್ಮ ಕಾರ್ಯಕ್ರಮವನ್ನು ವಿರೋಧ ಮಾಡುತ್ತಿದ್ದಾರೆ. ಬಿಜೆಪಿ ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡುತ್ತಿದೆ. ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಬಡವರ ವಿರೋಧಿಯಾಗಿದೆ ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಸುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಸಂಚನ್ನು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮಾಡುತ್ತಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.