ಬೆಂಗಳೂರು : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಹಲವು ಬಾರಿ ಹಲ್ಲೆ ನಡೆಸಿ, ಅವರ ಕರ್ತವ್ಯಗಳಿಗೆ ಅಡ್ಡಿಪಡಿಸಿ, ಬೆಲೆಬಾಳುವ ಮರಗಳನ್ನು ಕಳವು ಮಾಡಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಮೂವರು ಕ್ರಿಮಿನಲ್ಗಳಿಗೆ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಗುತ್ತಿಗೆ ಕಾರ್ಯಾದೇಶ ಪತ್ರಗಳನ್ನು ನೀಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಜಿಬಿಎ ಮುಖ್ಯ ಆಯುಕ್ತ ಹಾಗೂ ಜಿಬಿಎ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇಂತಹ ಕ್ರಿಮಿನಲ್ಗಳಿಗೆ ಕಾರ್ಯಾದೇಶ ಪತ್ರಗಳನ್ನು ನೀಡಿರುವ ಭ್ರಷ್ಟ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಸ್. ಸಂತೋಷ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವುದರ ಜೊತೆಗೆ, ಅವರಿಗೆ ನೀಡಿರುವ ಕಾರ್ಯಾದೇಶ ಪತ್ರಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪಾಲಿಕೆಯ ಅರಣ್ಯ ಇಲಾಖೆಯ ಗುತ್ತಿಗೆದಾರರಾಗಿರುವ ವಿ. ಶ್ರೀನಿವಾಸ್, ಜಿ. ಗೋವಿಂದಯ್ಯ ಮತ್ತು ಸಿ. ಚನ್ನಪ್ಪ ಅವರು ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಹಲವು ಬಾರಿ ಹಲ್ಲೆ ನಡೆಸಿದ್ದಾರೆ, ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಹಾಗೂ ಬ್ಲಾಕ್ಮೇಲ್ ಮಾಡುವುದನ್ನೇ ದಿನನಿತ್ಯದ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ. ಈ ಮೂವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಎಫ್ಐಆರ್ಗಳು ದಾಖಲಾಗಿವೆ. ಈಗಾಗಲೇ ಇವರನ್ನು ರೌಡಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಅರಣ್ಯ ಇಲಾಖೆ ಗುತ್ತಿಗೆ ಪರವಾನಗಿಯನ್ನೂ ರದ್ದುಪಡಿಸಲಾಗಿದೆ ಎಂದು ದೂರಿನಲ್ಲಿ ಎನ್.ಆರ್ ರಮೇಶ್ ಉಲ್ಲೇಖಿಸಿದ್ದಾರೆ.

ಅಲ್ಲದೇ, ತಮ್ಮ ಪರವಾಗಿ ಕಾರ್ಯಾದೇಶ ಪತ್ರಗಳನ್ನು ನೀಡದ ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸುವುದು ಹಾಗೂ ಬ್ಲಾಕ್ಮೇಲ್ ಮಾಡುವುದನ್ನೇ ದಿನನಿತ್ಯದ ಕಾಯಕವನ್ನಾಗಿ ಮಾಡಿಕೊಂಡಿರುವ ವಿ. ಶ್ರೀನಿವಾಸ್, ಜಿ. ಗೋವಿಂದಯ್ಯ ಮತ್ತು ಸಿ. ಚನ್ನಪ್ಪ ಅವರು ಹಲವು ಬಾರಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

ಇಷ್ಟೆಲ್ಲಾ ಆದರೂ, ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಮರಗಳು ಹಾಗೂ ಒಣಗಿರುವ ಮರದ ರೆಂಬೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಗಳಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ನಡೆಸಿ ವಿ. ಶ್ರೀನಿವಾಸ್, ಜಿ. ಗೋವಿಂದಯ್ಯ ಮತ್ತು ಸಿ. ಚನ್ನಪ್ಪಗೆ ಗುತ್ತಿಗೆ ಕಾರ್ಯಾದೇಶ ಪತ್ರಗಳನ್ನು ನೀಡಲಾಗಿದೆ ಎಂದು ದೂರಿನಲ್ಲಿ ಎನ್.ಆರ್. ರಮೇಶ್ ತಿಳಿಸಿದ್ದಾರೆ.
ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಸ್. ಸಂತೋಷ್ ಕುಮಾರ್ ಅವರು ಈ ಕಾರ್ಯಾದೇಶ ಪತ್ರಗಳನ್ನು ನೀಡಿದ್ದು, ಅವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಎನ್.ಆರ್ ರಮೇಶ್ ದೂರಿನಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ, ಇಂತಹ ವ್ಯಕ್ತಿಗಳಿಗೆ ನೀಡಲಾಗಿರುವ ಎಲ್ಲಾ ಕಾರ್ಯಾದೇಶ ಪತ್ರಗಳನ್ನು ಕೂಡಲೇ ರದ್ದುಪಡಿಸಿ, ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎನ್.ಆರ್. ರಮೇಶ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ


















