ಬೆಂಗಳೂರು : ಇದೇ ತಿಂಗಳ 9ರಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವತಿಯಿಂದ ಅದ್ದೂರಿಯಾಗಿ ಆಚರಿಸಲು ನಿಗದಿಯಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮುಂದಿನ ತಿಂಗಳಿಗೆ ಮುಂದೂಡಲು ತೀರ್ಮಾನಿಸಲಾಗಿದೆ.
ಈ ಬಾರಿ ಕೆಂಪೇಗೌಡ ಜಯಂತಿಯನ್ನು ವೈಭವದಿಂದ ಆಚರಿಸಲು ಜಿಬಿಎ ಈಗಾಗಲೇ ಸಕಲ ಸಿದ್ಧತೆ ನಡೆಸಿತ್ತು. ಜಿಬಿಎ ವ್ಯಾಪ್ತಿಯ ಐದು ನಗರಪಾಲಿಕೆಗಳ ಆಯುಕ್ತರು ಸಭೆ ನಡೆಸಿ ಕಾರ್ಯಕ್ರಮದ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸಿದ್ದರು. ಬೆಂಗಳೂರು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ಜಿಬಿಎ ವತಿಯಿಂದ ಭವ್ಯವಾಗಿ ಜಯಂತಿ ಆಚರಿಸುವ ಯೋಜನೆ ರೂಪಿಸಲಾಗಿತ್ತು.
ಸಚಿವರ ಅಧ್ಯಕ್ಷತೆಯಲ್ಲಿ ಐದು ನಗರಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನೂ ರಚಿಸಲಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿ ಸನ್ಮಾನಿಸುವ ಪ್ರಸ್ತಾವವೂ ಇತ್ತು. ಆದರೆ, ಜಿಬಿಎ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಗರಪಾಲಿಕೆಗಳ ಸಿಬ್ಬಂದಿ ಮತ್ತು ಅಧಿಕಾರಿಗಳು ಆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಸಿಬ್ಬಂದಿ ಕೊರತೆ ಉಂಟಾಗಿರುವ ಕಾರಣ ಜಯಂತಿಯನ್ನು ನಿಗದಿತ ದಿನಾಂಕದಲ್ಲಿ ನಡೆಸುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಮುಂದಿನ ತಿಂಗಳಲ್ಲಿ ಆಚರಿಸಲು ಜಿಬಿಎ ತೀರ್ಮಾನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಯಂತಿಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.
ಇದನ್ನೂ ಓದಿ : ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಹುಚ್ಚಾಟ ; ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರೋಚಕ ರಕ್ಷಣೆ!


















