ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭಾರಿ ಭ್ರಷ್ಟಾಚಾರ ಖಂಡಿಸಿ ಇದೇ ಬರುವ ಆಗಸ್ಟ್ 3ರಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ಅವರ ನೇತೃತ್ವದಲ್ಲಿ ಬೆಳಗ್ಗೆ 11.30ರಿಂದ ಈ ಬೃಹತ್ ಪ್ರತಿಭಟನೆ ನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾರ್ವಜನಿಕ ತೆರಿಗೆ ಹಣದಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಇಲಾಖೆಯ ನಿರ್ದೇಶಕ ಡಾ. ಮಹೇಶ್ ಬಾಬು ಎನ್. ಹಾಗೂ ಜಂಟಿ ನಿರ್ದೇಶಕ ನಿಶ್ಚಲ್ರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದೆ.

ಈ ಸಂಬಂಧ ಮಾತನಾಡಿರುವ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಡಾ. ಅರ್ಜುನ್ ಗೋಪಾಲಯ್ಯ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಾರ್ವಜನಿಕರ ತೆರಿಗೆ ಹಣದ ಸಾವಿರಾರು ಕೋಟಿ ರೂಪಾಯಿ ದುರ್ಬಳಕೆಯಾಗಿದ್ದು, ಬೋಗಸ್ ಟೆಂಡರ್ಗಳ ಮೂಲಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೇ ಇಲಾಖೆಯ ನಿರ್ದೇಶಕ ಹಾಗೂ ಜಂಟಿ ನಿರ್ದೇಶಕ ಸೇರಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ದೌರ್ಜನ್ಯ ನಡೆಸಿದ್ದು, ಈ ಕುರಿತು ಅಲ್ಲಿನ ಸ್ಟಾಫ್ಗಳೇ ನಮಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಈಗಾಗಲೇ ರಾಜ್ಯಪಾಲರಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರನ್ನು ಸಲ್ಲಿಸಿದ್ದರೂ ಕೂಡ ಈವರೆಗೆ ಭ್ರಷ್ಟ ಅಧಿಕಾರಿಗಳ ಮೇಲೆ ಯಾವುದೇ ಕ್ರಮವಾಗಿಲ್ಲ, ಹೀಗಾಗಿ ಇದೀಗ ಬೃಹತ್ ಹೋರಾಟ ನಡೆಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರೆಲ್ಲರು ಈ ಹೋರಾಟಕ್ಕೆ ಕೈ ಜೋಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಅರ್ಜುನ್ ಗೋಪಾಲಯ್ಯ ಅವರು ಕರೆ ನೀಡಿದ್ದಾರೆ.
ಇದನ್ನೂ ಓದಿ : ಬಹುನಿರೀಕ್ಷಿತ ‘ರಾಮಾಯಣ’ ಟ್ರೈಲರ್ ರಿಲೀಸ್ : ರಾವಣನಾಗಿ ಅಬ್ಬರಿಸಿದ ರಾಕಿಂಗ್ ಸ್ಟಾರ್ ಯಶ್!



















