ನವದೆಹಲಿ : ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಮತ್ತು ದೆಹಲಿಯಲ್ಲಿ ದಂಗೆಯನ್ನೇ ಎಬ್ಬಿಸಿದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ಕುರಿತು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದಿರುವ ಅವರು, ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯುವುದು ಇಡೀ ದೇಶದ ಜಂಟಿ ಹೊಣೆಗಾರಿಕೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ನಡೆದ ಎನ್ಡಿಎ (NDA) ಸಂಸದೀಯ ಪಕ್ಷದ ‘ಮಂಗಳ ಮಿಲನ’ ಸಭೆಯಲ್ಲಿ ಪ್ರಧಾನಿ ನೀಡಿದ ಈ ಹೇಳಿಕೆಯನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.
ಲೋಪದೋಷ ರಹಿತ ಪರೀಕ್ಷಾ ವ್ಯವಸ್ಥೆಗೆ ಕರೆ
ಸಭೆಯ ವಿವರ ನೀಡಿದ ಸಚಿವ ಕಿರಣ್ ರಿಜಿಜು, ದೇಶದಲ್ಲಿ ಭವಿಷ್ಯದಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಸಂಪೂರ್ಣ ಸುರಕ್ಷಿತ ಹಾಗೂ ‘ಫೂಲ್ಪ್ರೂಫ್’ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ ಎಂದರು. ನೀಟ್ ಅಕ್ರಮ ಹೊರಬಿದ್ದ ತಕ್ಷಣವೇ ಸರ್ಕಾರ ಕಾರ್ಯಪ್ರವೃತ್ತರಾಗಿದ್ದು, ತಪ್ಪಿತಸ್ಥರ ಬಂಧನ ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ತಕ್ಷಣವೇ ಮರುಪರೀಕ್ಷೆಯನ್ನೂ ಯಶಸ್ವಿಯಾಗಿ ನಡೆಸಲಾಗಿದೆ ಎಂಬುದನ್ನು ಪ್ರಧಾನಿ ಒತ್ತಿಹೇಳಿದ್ದಾರೆ ಎಂದು ರಿಜಿಜು ತಿಳಿಸಿದರು.
ಸಂಸತ್ತಿನಲ್ಲಿ ರಚನಾತ್ಮಕ ಸಹಕಾರಕ್ಕೆ ಮನವಿ
ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ, ಯುವಜನತೆಯ ಕಲ್ಯಾಣ ಮತ್ತು ದೇಶದ ಭವಿಷ್ಯದ ದೃಷ್ಟಿಯಿಂದ ಸಂಸತ್ತಿನ ಕಲಾಪಗಳಲ್ಲಿ ಎಲ್ಲ ಜನಪ್ರತಿನಿಧಿಗಳಿಗೂ ಸಮಾನ ಜವಾಬ್ದಾರಿಯಿದೆ. ಹೀಗಾಗಿ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ವಿಧೇಯಕಗಳ ಅಂಗೀಕಾರ ಹಾಗೂ ಚರ್ಚೆಗಳಿಗೆ ರಚನಾತ್ಮಕವಾಗಿ ಸಹಕರಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ನೀಟ್ ಅಕ್ರಮ ಮತ್ತು ಇತರ ಪ್ರಸಕ್ತ ವಿಷಯಗಳ ಕುರಿತು ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಬೆನ್ನಲ್ಲೇ ಪ್ರಧಾನಿಯವರಿಂದ ಈ ಹೇಳಿಕೆ ಹೊರಬಿದ್ದಿದೆ.
ಬೀದಿಗಿಳಿದ ವಿದ್ಯಾರ್ಥಿ ಪಡೆ, ರಾಜಧಾನಿಯಲ್ಲಿ ಉದ್ವಿಗ್ನತೆ
ಇನ್ನೊಂದೆಡೆ, ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿಯೊಬ್ಬರು ನೀಡಿದ ಪರೋಕ್ಷ ಹೇಳಿಕೆಯನ್ನು ಆಧರಿಸಿ ರೂಪುಗೊಂಡ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಸಂಸತ್ ಭವನದತ್ತ ಮೆರವಣಿಗೆ ನಡೆಸಲು ಸೋಮವಾರ ಯತ್ನಿಸಿದ್ದು, ಪೊಲೀಸರು ಅಶ್ರುವಾಯು ಹಾಗೂ ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
ಪ್ರತಿಭಟನಾ ನಿರತರ ಪರವಾಗಿ 21 ದಿನಗಳ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಅವರು ಆಸ್ಪತ್ರೆಯಲ್ಲೇ ತಮ್ಮ ನಿರಾಹಾರ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ. ಈ ನಡುವೆ ಸಿಜೆಪಿ (CJP) ನಿಯೋಗವು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಇದನ್ನೂ ಓದಿ : ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್’ ಪ್ರೊಟೆಸ್ಟ್ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!



















