ಬೆಂಗಳೂರು: ಜೆಡಿಎಸ್ ಕಾರ್ಯಕರ್ತರಿಗೆ ಸಿ.ಪಿ. ಯೋಗೇಶ್ವರ್ ಕಿರುಕುಳ ನೀಡುತ್ತಿದ್ದಾರೆಂದು ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಚನ್ನಪಟ್ಟಣದ ನೂತನ ಶಾಸಕರು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ಇದು ಅಪರಾಧ. ಪ್ರಜಾಪ್ರಭುತ್ವದಲ್ಲಿ ಇಂತಹ ನಡುವಳಿಕೆ ಒಳ್ಳೆಯದಲ್ಲ. ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ. ಚುನಾವಣೆಯ ನಂತರ ನಮ್ಮ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದ ಅಪರಾಧ. ಇದನ್ನು ನಾವು ಖಂಡಿಸುತ್ತೇವೆ ಎಂದು ಆರೋಪಿಸಿದ್ದಾರೆ.
ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಮುಂದಿನ ದಿನಗಳಲ್ಲಿ ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಈ ಹೊಸ ಶಾಸಕ ಕ್ಷೇತ್ರದ ಕೆಲಸ ಮಾಡಬೇಕು, ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು. ಅದು ಬಿಟ್ಟು ದ್ವೇಷ ರಾಜಕಾರಣ ಮಾಡವುದು ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ನಾವು ಇರುತ್ತೇವೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ. ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ ಎಂದು ಹೇಳಿದ್ದಾರೆ.