ಬೆಂಗಳೂರು, ಆಗಸ್ಟ್ 17 : ಕರ್ನಾಟಕದಲ್ಲಿ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ದಾಳಿಗಳು ಮತ್ತ ಆಹಾರ ಗುಣಮಟ್ಟ ಪರಿಶೀಲನೆ ಬಗ್ಗೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಆರೋಗ್ಯ ಸಚಿವ ಯು.ಟಿ ಖಾದರ್, ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇನ್ನು ಮುಂದೆ ಪಿಜಿಗಳು, ಹಾಸ್ಟೆಲ್ಗಳು, ಬಸ್ ನಿಲ್ದಾಣ ಮತ್ತು ರೈಲ್ವೆ ಕ್ಯಾಂಟೀನ್ಗಳು ಹಾಗೂ ಮದುವೆ ಸಮಾರಂಭಗಳಿಗೆ ಆಹಾರ ಒದಗಿಸುವ ಕ್ಯಾಟರಿಂಗ್ ಸೇವೆಗಳಿಗೂ ಆಹಾರ ಗುಣಮಟ್ಟದ ಪರಿಶೀಲನೆ ನಡೆಸಲಾಗುವುದು ಎಂದು ಖಾದರ್ ತಿಳಿಸಿದ್ದಾರೆ.
ಇತ್ತೀಚೆಗೆ ಹೋಟೆಲ್ಗಳು ಹಾಗೂ ಆಹಾರ ಮಳಿಗೆಗಳ ಮೇಲೆ ನಡೆಸಿದ ದಾಳಿಗಳ ಸಂದರ್ಭ ಕಳಪೆ ಗುಣಮಟ್ಟದ ಹಲವು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದಲೇ ಆಹಾರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಇಲಾಖೆಯ ಉದ್ದೇಶವಾಗಿದೆ.
ವಿಶೇಷವಾಗಿ ಪಿಜಿಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಮತ್ತು ಯುವಜನರ ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ, ಪಿಜಿ ಮಾಲೀಕರು ತಮ್ಮಲ್ಲಿರುವವರನ್ನು ಸ್ವಂತ ಮಕ್ಕಳಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಪಿಜಿಗಳನ್ನು ಮುಚ್ಚುವುದು ಉತ್ತಮ ಎಂದು ಖಾದರ್ ಎಚ್ಚರಿಸಿದ್ದಾರೆ. ನಿಯಮ ಉಲ್ಲಂಘಿಸುವ ಪಿಜಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಸಾರ್ವಜನಿಕರು ದೂರು ನೀಡಲು ಅನುವಾಗುವಂತೆ, ಹೋಟೆಲ್ಗಳು ಮತ್ತು ಮೆಡಿಕಲ್ ಸ್ಟೋರ್ಗಳಲ್ಲಿ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಪರಿಚಯಿಸಲಾಗುವುದು. ಇದನ್ನು ಸ್ಕ್ಯಾನ್ ಮಾಡುವ ಮೂಲಕ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದು. ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಗೆ ಬರುತ್ತಿರುವಂತಹ ವ್ಯವಸ್ಥೆಯಾಗಿದೆ ಎಂದು ಸಚಿವ ಖಾದರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : GBA ಎಚ್ಚರಿಕೆ ಬೆನ್ನಲ್ಲೇ ನಿವೇಶನ ಕ್ಲೀನ್ ಮಾಡಿಸಲು ಮುಗಿಬಿದ್ದ ಜನ.. ಜೆಸಿಬಿ ಬಾಡಿಗೆ ದಿಢೀರ್ ಏರಿಕೆ!



















