ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳಲ್ಲಿ ತೀವ್ರ ಶಿಕ್ಷಕರ ಕೊರತೆ ಉಂಟಾಗಿದ್ದು, ಶಾಲೆಗಳು ಆರಂಭವಾಗಿ 15 ದಿನ ಕಳೆದರೂ ಮಕ್ಕಳಿಗೆ ಸರಿಯಾಗಿ ಪಾಠಗಳು ಆರಂಭವಾಗಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ತುಮರಿ ಸಮೀಪದ ಚಂದ್ರವಳ್ಳಿ ಮತ್ತು ಕಳೂರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದ ಕಾರಣ ತರಗತಿಗಳು ಸ್ಥಗಿತಗೊಂಡಿವೆ. ಶಾಲೆಗಳು ತೆರೆದಿದ್ದರೂ ಬೋಧನೆ ನಡೆಯದ ಸ್ಥಿತಿ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಭವಿಷ್ಯದ ಬಗ್ಗೆ ಕಳವಳಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಶಾಲಾ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದು, ಶಿಕ್ಷಕರ ನೇಮಕಾತಿ ಅಥವಾ ತಾತ್ಕಾಲಿಕ ವ್ಯವಸ್ಥೆ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.
ಶಾಲಾ ಅಧ್ಯಕ್ಷ ಮಂಜುನಾಥ್ ಮಾತನಾಡಿ, “ಶಾಲೆ ಆರಂಭವಾಗಿ 15 ದಿನ ಕಳೆದರೂ ನಮ್ಮ ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಿಲ್ಲ. ನಮ್ಮ ಹೋಬಳಿಯ ಬಹುತೇಕ ಎಲ್ಲಾ ಸರ್ಕಾರಿ ಶಾಲೆಗಳ ಪರಿಸ್ಥಿತಿಯೂ ಇದೇ ಆಗಿದೆ. ಕೆಲವು ಶಾಲೆಗಳಲ್ಲಿ ಒಬ್ಬರೂ ಸರ್ಕಾರಿ ಶಿಕ್ಷಕರಿಲ್ಲ. ಕೆಲವೆಡೆ ಅತಿಥಿ ಶಿಕ್ಷಕರ ಮೂಲಕ ಪಾಠ ನಡೆಸಲಾಗುತ್ತಿದೆ. ಇದು ಹೀಗೆ ಮುಂದುವರಿದರೆ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ದೊಡ್ಡ ಮಟ್ಟದಲ್ಲಿ ಧಕ್ಕೆ ಉಂಟಾಗಲಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ಕೂಡಲೇ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಶಿಕ್ಷಕರನ್ನು ನಿಯೋಜಿಸಬೇಕು. ಇಲ್ಲವಾದರೆ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಅಪಾರ ನಷ್ಟವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಚಂದ್ರವಳ್ಳಿ ಮತ್ತು ಕಳೂರು ಶಾಲೆಗಳಷ್ಟೇ ಅಲ್ಲದೆ, ಈ ಭಾಗದ ಬಹುತೇಕ ಸರ್ಕಾರಿ ಶಾಲೆಗಳಲ್ಲೂ ಶಿಕ್ಷಕರ ಕೊರತೆಯ ಸಮಸ್ಯೆ ಎದುರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ಸಮಸ್ಯೆ ಪರಿಹಾರಕ್ಕೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮಸ್ಯೆಯತ್ತ ಗಮನ ಹರಿಸುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಕೂಡಲೇ ಶಿಕ್ಷಕರನ್ನು ನಿಯೋಜಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ಕೇಂದ್ರ ಸರ್ಕಾರದ NABARD ಸಂಸ್ಥೆಯಲ್ಲಿ ನೇಮಕಾತಿ!



















