ರಾಮನಗರ: ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವುದಕ್ಕೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚರ್ಚೆ ಈಗಲೇ ಶುರುವಾಗಿದೆ.
ಈಗಾಗಲೇ ಎಲ್ಲ ಪಕ್ಷಗಳ ನಾಯಕರ ಕಣ್ಣು ಚನ್ನಪಟ್ಟಣದ ಮೇಲೆ ಬಿದ್ದಿದೆ. ಚನ್ನಪಟ್ಟಣಕ್ಕೆ ಮೂರ್ನಾಲ್ಕು ಬಾರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮತದಾರರನ್ನು ವಿಶ್ವಾಸಕ್ಕೆ ಪಡೆಯಲು ಕಸರತ್ತು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಸಿಕ್ಕಿತ್ತು. ಆದರೆ, ಈಗ ಡಿಕೆಶಿ ಅವರ ಬದಲಿಗೆ ಅವರ ಪುತ್ರಿ ಐಶ್ವರ್ಯಾ ಅವರು ಸ್ಪರ್ಧೆ ಮಾಡುತ್ತಾರೆಂಬ ಸುಳಿವು ಕೂಡ ಸಿಗುತ್ತಿದೆ.
ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲಿಯೇ ಚನ್ನಪಟ್ಟಣದ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋಲು ಕಂಡ ಡಿಕೆ ಬ್ರದರ್ಸ್ ಈಗ ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸೋಲಿನ ಸೇಡನ್ನು ಚನ್ನಪಟ್ಟಣ ಗೆದ್ದು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್ ಪಾಳಯದಲ್ಲಿ ದಿನಕ್ಕೊಂದು ಅಚ್ಚರಿಯ ಹೆಸರು ಕೇಳಿ ಬರುತ್ತಿದ್ದು, ಜನರು ತಲೆ ಕೆರೆದುಕೊಳ್ಳುವಂತಾಗಿದೆ.
ಇದರೊಂದಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಈ ಕ್ಷೇತ್ರಗಳ ಟಿಕೆಟ್ ಗಾಗಿ ಆಕಾಂಕ್ಷಿತರು ಪೈಪೋಟಿ ನಡೆಸುತ್ತಿದ್ದಾರೆ. ಅದರಲ್ಲಿಯೂ ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆ ಕಣವಾಗಿ ಸ್ವೀಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷಗಳ ಬಲಾಬಲ ಪ್ರದರ್ಶನಕ್ಕೆ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಅಪರೂಪ ಎನ್ನುವಂತೆ ಆಗಾಗ ಭೇಟಿ ನೀಡುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ಬಾರಿ ಭೇಟಿ ನೀಡಿದ್ದಾರೆ. ಒಮ್ಮೆ ದೇವರ ದರ್ಶನಕ್ಕೆ, ಮತ್ತೊಮ್ಮೆ ರಾಜಕೀಯ ನಾಯಕರ ಭೇಟಿಗೆ ಹಾಗೂ ಮತ್ತೊಮ್ಮೆ ಚನ್ನಪಟ್ಟಣದಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಸೇರಿ ನೆಪ ಮಾಡಿಕೊಂಡು ಜನರ ಬಳಿ ತೆರಳುತ್ತಿದ್ದಾರೆ. ಪ್ರತಿಬಾರಿ ಹೋದಾಗಲೂ ರಾಜಕೀಯ ದಾಳಗಳನ್ನು ಉರುಳಿಸುತ್ತಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನವನ್ನು ಕೊಡುವುದಾಗಿಯೂ ಘೋಷಣೆ ಮಾಡಿದ್ದಾರೆ. ಇದಕ್ಕಿಂತ ಹೆಚ್ಚಾಗಿ ಈ ಕ್ಷೇತ್ರದಿಂದ ತಾವೇ ಸ್ಪರ್ಧಿಸುವುದರ ಕುರಿತು ಕೂಡ ಸುಳಿವು ನೀಡುತ್ತಿದ್ದಾರೆ.
ಈಗ ಮತ್ತೊಂದು ಸುದ್ದಿ ಹೊರ ಬಿದ್ದಿದ್ದು, ಚನ್ನಪಟ್ಟಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಸ್ಪರ್ಧೆಯ ಬದಲಾಗಿ ಅವರ ಮಗಳು ಐಶ್ವರ್ಯಾ ಅವರನ್ನು ಸ್ಪರ್ಧೆಗೆ ಇಳಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಉದ್ಯಮ, ಶಿಕ್ಷಣ ಸಂಸ್ಥೆಗಳನ್ನು ನಿರ್ವಹಣೆ ಮಾಡುತ್ತಾ ಬಂದಿರುವ ಐಶ್ವರ್ಯಾ ಕೂಡ ರಾಜಕೀಯ ಪ್ರವೇಶಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಐಶ್ವರ್ಯಾ ಅವರ ಸ್ಪರ್ಧೆಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಅಪಸ್ವರಗಳು ಕೇಳಿ ಬರುತ್ತಿವೆ ಎಂಬ ಸುಳಿವು ಸಿಕ್ಕಿದೆ. ಅವರನ್ನು ಮನವೊಲಿಕೆ ಮಾಡಿ ಡಿ.ಕೆ. ಶಿವಕುಮಾರ್ ತಮ್ಮ ಪುತ್ರಿಯನ್ನು ಕಣಕ್ಕಿಳಿಸುತ್ತಾರಾ ಎಂಬುವುದನ್ನು ಕಾಯ್ದು ನೋಡಬೇಕಿದೆ.