ನವದೆಹಲಿ: ಕಳೆದ ಮೇ ತಿಂಗಳಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆಯ ಮೊದಲ ದಿನವೇ ಭಾರತ ಸೋಲನುಭವಿಸಿತ್ತು ಎಂಬ ತಮ್ಮ ಹೇಳಿಕೆಗೆ ಬದ್ಧರಾಗಿರುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಬುಧವಾರ ಹೇಳಿದ್ದಾರೆ.
ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಚವಾಣ್, “ಆಪರೇಷನ್ ಸಿಂದೂರದ ಮೊದಲ ದಿನವೇ ಭಾರತೀಯ ಸೇನೆಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿತ್ತು ಮತ್ತು ಭಾರತೀಯ ವಾಯುಪಡೆ ಸಂಪೂರ್ಣವಾಗಿ ನೆಲಕಚ್ಚಿತ್ತು,” ಎಂದು ಹೇಳುವ ಮೂಲಕ ಭಾರೀ ವಿವಾದದ ಕಿಡಿ ಹೊತ್ತಿಸಿದ್ದರು.
“ಕ್ಷಮೆ ಕೇಳುವ ಅಗತ್ಯವಿಲ್ಲ”
ಈ ಬಗ್ಗೆ ಬುಧವಾರ ಪ್ರತಿಕ್ರಿಯಿಸಿರುವ ಚವಾಣ್, “ನಾನು ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ಹೀಗಾಗಿ ಕ್ಷಮೆ ಕೇಳುವ ಅಗತ್ಯವೂ ಇಲ್ಲ. ಸದ್ಯಕ್ಕೆ ನಾನು ಈ ವಿಷಯದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ, ಆದರೆ ನನ್ನ ಮಾತಿಗೆ ನಾನು ಬದ್ಧ,” ಎಂದು ಹೇಳುವ ಮೂಲಕ ವಿವಾದಕ್ಕೆ ಮತ್ತಷ್ಟು ತುಪ್ಪ ಸುರಿದಿದ್ದಾರೆ. ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಚವಾಣ್ ಅವರ ಈ ಹೇಳಿಕೆ ಬಿಜೆಪಿಗೆ ಕಾಂಗ್ರೆಸ್ ವಿರುದ್ಧ ಮುಗಿಬೀಳಲು ಪ್ರಬಲ ಅಸ್ತ್ರ ಒದಗಿಸಿದಂತಾಗಿದೆ.
ಸೇನೆಯನ್ನು ಅವಮಾನಿಸುವುದು ಕಾಂಗ್ರೆಸ್ ಚಾಳಿ: ಬಿಜೆಪಿ ಆಕ್ರೋಶ
ಚವಾಣ್ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಾಕಿಸ್ತಾನದ ಪರವಾಗಿ ಮಾತನಾಡುತ್ತಿದೆ ಎಂದು ಆರೋಪಿಸಿದ್ದಾರೆ. ಶೆಹಜಾದ್ ಪೂನಾವಾಲಾ (ಬಿಜೆಪಿ ವಕ್ತಾರ) ಟ್ವೀಟ್ ಮಾಡಿ, “ಸೇನೆಯನ್ನು ಅವಮಾನಿಸುವುದು ಕಾಂಗ್ರೆಸ್ ಪಕ್ಷದ ಚಾಳಿಯಾಗಿದೆ. ರಾಹುಲ್ ಗಾಂಧಿ ಕೂಡ ಇಂತಹ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇಂತಹ ನಾಯಕರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಅವರ ಮನಸ್ಥಿತಿಯನ್ನು ತೋರಿಸುತ್ತದೆ,” ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರತಿಕ್ರಿಯಿಸಿ, “ನಮ್ಮ ಸೇನೆಯ ಶೌರ್ಯವನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹೀಗೆ ಮಾಡುವವರು ಎಂದಿಗೂ ರಾಷ್ಟ್ರದ ಹಿತಾಸಕ್ತಿಯ ಬಗ್ಗೆ ಯೋಚಿಸಲು ಸಾಧ್ಯವಿಲ್ಲ” ಎಂದಿದ್ದಾರೆ. ಬಿಜೆಪಿ ಸಂಸದ ಬ್ರಿಜ್ ಲಾಲ್, “ಕಾಂಗ್ರೆಸ್ ಸದಾ ಪಾಕಿಸ್ತಾನದ ಪರವಾಗಿಯೇ ಮಾತನಾಡುತ್ತದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ಭಾರತವನ್ನು ಅವಮಾನಿಸುತ್ತಾರೆ. ಸಾರ್ವಜನಿಕರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದಿದ್ದಾರೆ.
ಅಂತರ ಕಾಯ್ದುಕೊಂಡ ಕಾಂಗ್ರೆಸ್
ಚವಾಣ್ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಎಚ್ಚೆತ್ತುಕೊಂಡಿದ್ದು, ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಕಾಂಗ್ರೆಸ್ ಸಂಸದ ಸುಖದೇವ್ ಭಗತ್ ಪ್ರತಿಕ್ರಿಯಿಸಿ, “ಆ ಮಾಹಿತಿಯ ಮೂಲ ಯಾವುದು ಎಂಬುದು ಪೃಥ್ವಿರಾಜ್ ಅವರಿಗೇ ಗೊತ್ತು. ಆದರೆ ನಮಗೆ ನಮ್ಮ ಸೇನೆಯ ಬಗ್ಗೆ ಹೆಮ್ಮೆಯಿದೆ. ಭಯೋತ್ಪಾದನೆ ಮತ್ತು ಪಾಕಿಸ್ತಾನದ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಸದಾ ಬೆಂಬಲ ನೀಡುತ್ತದೆ,” ಎಂದು ಸ್ಪಷ್ಟಪಡಿಸಿದ್ದಾರೆ.
ಏನಿದು ‘ಆಪರೇಷನ್ ಸಿಂದೂರ’?
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯೇ ‘ಆಪರೇಷನ್ ಸಿಂದೂರ’. ಈ ಕಾರ್ಯಾಚರಣೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿತ್ತು.
ಏನಿದು ‘ಆಪರೇಷನ್ ಸಿಂದೂರ’?
ಅಕ್ಟೋಬರ್ನಲ್ಲಿ ಮಾಹಿತಿ ನೀಡಿದ್ದ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್, ಪಾಕಿಸ್ತಾನದ ಎಫ್-16 ಮತ್ತು ಜೆ-17 ಯುದ್ಧ ವಿಮಾನಗಳನ್ನು ಭಾರತ ಹೊಡೆದುರುಳಿಸಿದೆ ಎಂದು ದೃಢಪಡಿಸಿದ್ದರು. ಭಾರತದ ರಫೇಲ್ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂಬ ವರದಿಗಳು ಕೇವಲ ಸುಳ್ಳು ಪ್ರಚಾರ ಎಂದು ಅವರು ತಳ್ಳಿಹಾಕಿದ್ದರು. ಆದರೆ, ಈಗ ಪೃಥ್ವಿರಾಜ್ ಚವಾಣ್ ಅವರ ಹೇಳಿಕೆ ಈ ಹಳೆಯ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.
ಇದನ್ನೂ ಓದಿ :“ತಂದೆಯನ್ನು ಕೊಲ್ಲುವುದು ನನ್ನ ಧರ್ಮ”: ಅಮೆರಿಕದಲ್ಲಿ ಸುತ್ತಿಗೆಯಿಂದ ಹೊಡೆದು ತಂದೆಯನ್ನೇ ಕೊಂದ ಭಾರತೀಯ ಮೂಲದ ಯುವಕ!



















