ಮೈಸೂರು : ‘ನಮ್ಮ ಗ್ರಾಮಕ್ಕೆ ಬಾರ್ ಬೇಡ’ ಎಂದು ಮೈಸೂರಿನ ಹೊಸರಾಮನಹಳ್ಳಿ ಗ್ರಾಮಸ್ಥರು ಬಾರ್ ತೆರೆಯಲು ಅವಕಾಶ ನೀಡದಂತೆ ಒತ್ತಾಯಿಸಿ ಪಿಡಿಒಗೆ ಮನವಿ ಮಾಡಿದ್ದಾರೆ.
ಹುಣಸೂರು ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಅಂಚೆ ಕಛೇರಿ, ಬ್ಯಾಂಕ್, ಆಸ್ಪತ್ರೆ, ನ್ಯಾಯಬೆಲೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸೇರಿ ವಿವಿಧ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿದಿನ ನೂರಾರು ಜನ ಮಹಿಳೆಯರು, ವಿದ್ಯಾರ್ಥಿಗಳು ಶಾಲಾ-ಕಾಲೇಜು, ವ್ಯವಹಾರಕ್ಕೆ ಗ್ರಾಮಕ್ಕೆ ಆಗಮಿಸುತ್ತಾರೆ. ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದರಿಂದ ನಾನಾ ರೀತಿ ಸಮಸ್ಯೆ ಎದುರಾಗುತ್ತದೆ. ಹಾಗಾಗಿ ಮದ್ಯದ ಅಂಗಡಿಗೆ ಅನುಮತಿ ನೀಡಬಾರದೆಂದು ಪಿಡಿಒಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.
ಬಾರ್ ತೆರೆಯಲು ಎನ್ಒಸಿಗಾಗಿ ಅರ್ಜಿ ಹಾಕಿರುವ ಹಿನ್ನೆಲೆ ಅರ್ಜಿ ತಿರಸ್ಕರಿಸುವಂತೆ ಹಾಗೂ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಗ್ರಾಮದ ಹಿತ ಕಾಯಬೇಕೆಂದು ವಿನಂತಿ ಮಾಡಿಕೊಂಡಿದ್ದಾರೆ.
ಒಂದು ವೇಳೆ ಬಾರ್ ಅಥವಾ ಯಾವುದೇ ರೀತಿಯ ಮದ್ಯದಂಗಡಿ ಪ್ರಾರಂಭಿಸಿದರೆ ರೈತ ಸಂಘ, ಸ್ತ್ರೀ ಶಕ್ತಿ ಸೇರಿ ವಿವಿಧ ಸಂಘಟನೆಗಳು ಮತ್ತು ಗ್ರಾಮಸ್ಥರು ಉಗ್ರ ಪ್ರತಿಭಟನೆಯ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು | ಸಹಾಯಕ್ಕೆ ತೆರಳಿದವನ ಕಾಲನ್ನೇ ಸೀಳಿದ ಗಾಳಿಪಟ ದಾರ!



















