ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ಧ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಹೆಚ್ಚಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರ ಸರ್ಕಲ್ನಲ್ಲಿ ನಿರ್ಮಾಪಕ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಕನ್ನಡಪರ ಸಂಘಟನೆಗಳು ಬೀದಿಗಿಳಿಯಲಿವೆ. ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಹಾಗೂ ಜೈ ಕರ್ನಾಟಕ ಸಂಘಟನೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.
ಸಿಡಬ್ಲ್ಯುಆರ್ಸಿ ಆದೇಶವನ್ನು ಖಂಡಿಸಿ ‘ಕರಾಳ ದಿನಾಚರಣೆ’ ಆಚರಿಸುವ ಮೂಲಕ ಪ್ರತಿಭಟನೆ ನಡೆಸಲು ಸಂಘಟನೆಗಳು ನಿರ್ಧರಿಸಿವೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿರುವಾಗ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದು, ಕೂಡಲೇ ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಸರ್ಕಾರ ನೀರು ಹರಿಸಿದರೆ ‘ಕರ್ನಾಟಕ ಬಂದ್’ ಹೋರಾಟಕ್ಕೂ ಕರೆ ನೀಡುವ ಎಚ್ಚರಿಕೆಯನ್ನು ಕನ್ನಡಪರ ಸಂಘಟನೆಗಳು ನೀಡಿವೆ. ಕಾವೇರಿ ನೀರಿನ ವಿಚಾರ ಮತ್ತೊಮ್ಮೆ ರಾಜ್ಯದಲ್ಲಿ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಗೆ ಕಾರಣವಾಗಿದ್ದು, ಇಂದಿನ ಪ್ರತಿಭಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಪರ ಹೋರಾಟಗಾರರು ಸೇರುವ ನಿರೀಕ್ಷೆಯಿದೆ.
ಇದನ್ನೂ ಓದಿ ; ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!



















